ಬೆಂಗಳೂರು: ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಆಗಲು ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನಖರ್ಗೆ, ಜಿ.ಪರಮೇಶ್ವರ ಅತ್ಯಂತ ಅರ್ಹರು. ಅಂತಹವರಿಗೇ ಮುಖ್ಯಮಂತ್ರಿ ಹುದ್ದೆ ಕೊಡಬೇಕು ಎಂದು ವಿಧಾನಪರಿಷತ್ನ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಆ ಪಕ್ಷದಲ್ಲಿ ಅತ್ಯಂತ ಹಿರಿಯ ಪ್ರಭಾವಿ ನಾಯಕರು ಇದ್ದರೂ ಬೇರೆ ಪಕ್ಷದಿಂದ ಬಂದ ಸಿದ್ದರಾಮಯ್ಯ ಅವರನ್ನು ಕರೆದು ಮುಖ್ಯಮಂತ್ರಿ ಮಾಡಲಾಗಿತ್ತು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ವಿಧಾನಸಭಾ ಚುನಾವಣೆಗೆ ಸಾಕಷ್ಟು ಸಮಯ ಇದ್ದರೂ ಈಗಿನಿಂದಲೇ ತಮ್ಮ ಕಡೆಯವರ ಮೂಲಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಸಿದ್ದರಾಮಯ್ಯ ನಡೆಸಿದ್ದಾರೆ. ಈಗಲೇ ಅವರು ಆ ರೀತಿ ಹೇಳುವುದು ಸರಿಯಲ್ಲ. ಚುನಾವಣೆಯಲ್ಲಿ ಗೆದ್ದ ಬಳಿಕ ಹೇಳಿಕೊಳ್ಳಲಿ ಎಂದರು.
ಸಿದ್ದರಾಮಯ್ಯ ಅವರ ಹಿಂಬಾಲಕರು ಈಗಲೇ 150 ಸೀಟು ಗೆಲ್ಲುತ್ತೇವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಹಿಂದಿನ ಚುನಾವಣೆಯು ಸಿದ್ದರಾಮಯ್ಯ ನೇತೃತ್ವದಲ್ಲೇ ನಡೆಯಿತು. ಆಗ ಕಾಂಗ್ರೆಸ್ 70 ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಇವರಿಗೆ ಈಗ ಸ್ವಂತ ಕ್ಷೇತ್ರ ಇಲ್ಲದೆ, ಗೆಲ್ಲಬಹುದಾದ ಸುರಕ್ಷಿತ ಕ್ಷೇತ್ರಕ್ಕೆ ಹುಡುಕಾಟ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ವಿಶ್ವನಾಥ್ ಲೇವಡಿ ಮಾಡಿದ್ದಾರೆ.
ಜಮೀರ್ ಅಹಮ್ಮದ್ ಅವರನ್ನು ಮುಂದಿಟ್ಟುಕೊಂಡು ಹೋದರೆ ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.