
ನವದೆಹಲಿ: ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ನಾಯಕತ್ವ ಜಟಾಪಟಿ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರನ್ನು ಬುಧವಾರ ರಾತ್ರಿ ಭೇಟಿ ಮಾಡಿ ಸಮಾಲೋಚಿಸಿದರು. ಈ ಮೂಲಕ, ತಮ್ಮ ಕನಸು ಸಾಕಾರಗೊಳಿಸಿಕೊಳ್ಳುವ ಯತ್ನ ಮುಂದುವರಿಸಿದರು.
ಅಸ್ಸಾಂ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರ ಹೆಣೆಯಲು ಎಐಸಿಸಿ ಕಚೇರಿಯಲ್ಲಿ ಮಂಗಳವಾರ ರಾತ್ರಿ ಆಯೋಜಿಸಿದ್ದ ಸಭೆಯಲ್ಲಿ ಶಿವಕುಮಾರ್ ಭಾಗಿಯಾಗಿದ್ದರು. ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ಗುರುವಾರ ನಡೆಯಲಿದೆ. ಇದರ ನಡುವೆ, ಪಕ್ಷದ ಉನ್ನತ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಉಪಮುಖ್ಯಮಂತ್ರಿ ಪ್ರಯತ್ನಿಸಿದರು. ಆದರೆ, ಯಶಸ್ಸು ಸಿಗಲಿಲ್ಲ.
ರಾಹುಲ್ ಹಾಗೂ ಪಕ್ಷದ ಉನ್ನತ ನಾಯಕರನ್ನು ಸಂಸತ್ನಲ್ಲೇ ಕಾಣುವ ಉದ್ದೇಶದಿಂದ ಶಿವಕುಮಾರ್ ಅವರು ಪಾರ್ಲಿಮೆಂಟ್ ಪಾಸ್ ಮಾಡಿಸಿಕೊಂಡಿದ್ದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಅವರು ತಮ್ಮ ಭಾಷಣ ಮುಗಿದ ಬೆನ್ನಲ್ಲೇ ಲೋಕಸಭೆಯಿಂದ ನಿರ್ಗಮಿಸಿದರು.
ಸಹೋದರ ಡಿ.ಕೆ. ಸುರೇಶ್ ಜತೆಗೂಡಿ ಖರ್ಗೆ ಅವರನ್ನು ಭೇಟಿ ಮಾಡಿದ ಶಿವಕುಮಾರ್, ಅಧಿಕಾರ ಹಸ್ತಾಂತರ ಗೊಂದಲವನ್ನು ಶೀಘ್ರ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಆ ಬಳಿಕ, ವೇಣುಗೋಪಾಲ್ ಅವರನ್ನು ಸಹೋದರರು ಭೇಟಿ ಮಾಡಿ ಚರ್ಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.