ADVERTISEMENT

ಸಚಿವ ಮಹದೇವಪ್ಪಗೆ ಸಿ.ಎಂ ಬದಲಾವಣೆ ಮಾಹಿತಿ ಸಿಕ್ಕಿರಬಹುದು; ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 11:23 IST
Last Updated 24 ಫೆಬ್ರುವರಿ 2026, 11:23 IST
<div class="paragraphs"><p> ಸಚಿವ ಎಚ್.ಸಿ. ಮಹದೇವಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, </p></div>

ಸಚಿವ ಎಚ್.ಸಿ. ಮಹದೇವಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,

   

-ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಸಚಿವ ಮಹದೇವಪ್ಪ ಕೂಡ ನಮ್ಮ ಹೈಕಮಾಂಡ್ ಆಗಿರುವುದರಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಅವರಿಗೆ ತಿಳಿದಿರಬೇಕು. ಹೀಗಾಗಿ, ದಲಿತ ಮುಖ್ಯಮಂತ್ರಿ ವಿಚಾರವನ್ನು ಅವರು ಪ್ರಸ್ತಾಪ ಮಾಡಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ADVERTISEMENT

ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಮಹದೇವಪ್ಪ ಅವರ ಹೇಳಿಕೆ ನೋಡಿದೆ. ಅವರಿಗೆ ಮುಖ್ಯಮಂತ್ರಿ ಬದಲಾವಣೆ ಮಾಹಿತಿ ಇರಬಹುದು. ಆದರೆ, ಆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದರು.

‘ನಿಮ್ಮನ್ನು ಮತ್ತು ಮುಖ್ಯಮಂತ್ರಿ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಆಹ್ವಾನಿಸಿದ್ದಾರೆಯೇ’ ಎಂಬ ಪ್ರಶ್ನೆಗೆ, ‘ನನಗೆ ಯಾವುದೇ ಕರೆ ಬಂದಿಲ್ಲ. ಆದರೆ, ಇಲಾಖೆಗೆ ಸಂಬಂಧಿಸಿದ ಕೆಲಸಗಳ ಮೇಲೆ ನಾನು ದೆಹಲಿಗೆ ಹೋಗಬೇಕಾಗಿದೆ’ ಎಂದರು.

ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಸಚಿವರ ಹೇಳಿಕೆಗಳ ಬಗ್ಗೆ ನೀವು ಮೌನವಾಗಿದ್ದೀರಿ ಎಂದು ಕೇಳಿದಾಗ, ‘ಸಚಿವರು ಮತ್ತು ಶಾಸಕರನ್ನು ನಿಯಂತ್ರಣ ಮಾಡಬೇಕಿರುವುದು ಮುಖ್ಯಮಂತ್ರಿ. ಪಕ್ಷದ ವಿಚಾರವಾಗಿ ದೆಹಲಿಗೆ ಮಾಹಿತಿ ನೀಡುವ ಕೆಲಸವನ್ನು ನಾನು ಮಾಡುತ್ತಿದ್ದೇನೆ’ ಎಂದು ಶಿವಕುಮಾರ್ ತಿಳಿಸಿದರು.

‘ಪರಮೇಶ್ವರ ಅವರಿಗೆ ಮೊದಲು ಕೂಲಿ ಕೊಡಲಿ’ ಎಂಬ ಶಾಸಕ ಕೆ.ಎನ್‌. ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ಅವರು ದೊಡ್ಡವರು’ ಎಂದಷ್ಟೆ ಪ್ರತಿಕ್ರಿಯಿಸಿದರು.

‘ಸತೀಶ ಜಾರಕಿಹೊಳಿ ಅವರು ನಿಮ್ಮ ಜತೆ ಚರ್ಚೆ ಮಾಡಿದ್ದಾರಾ’ ಎಂಬ ಪ್ರಶ್ನೆಗೆ, ‘ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ನನ್ನ ಜತೆ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ನಾವು ವಾರಕ್ಕೊಮ್ಮೆ ಮಾತನಾಡುತ್ತಿರುತ್ತೇವೆ. ನಾವು ಸಮಾನ ಮನಸ್ಕರು. ನಮ್ಮ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾವೆಲ್ಲ ಯೋಜನೆ ರೂಪಿಸುತ್ತಿದ್ದೇವೆ’ ಎಂದು ತಿಳಿಸಿದರು.

‘ಮೊದಲ ಬಾರಿಗೆ ಆಯ್ಕೆಯಾದ ಶಾಸಕರಲ್ಲಿ ಕನಿಷ್ಠ ಐವರಿಗೆ ಮಂತ್ರಿ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿ ಹೈಕಮಾಂಡ್‌ಗೆ 31 ಶಾಸಕರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, ‘ನನಗೆ ಆ ಪತ್ರ ತಲುಪಿಲ್ಲ. ಎಲ್ಲರಿಗೂ ಮಂತ್ರಿಯಾಗುವ ಆಸೆ ಇರುತ್ತದೆ. ಮೋದಿ ಅವರು ಶಾಸಕರಾಗದೇ ಮುಖ್ಯಮಂತ್ರಿ ಆಗಲಿಲ್ಲವೇ. ಶಾಸಕರು ಕೇಳುವುದರಲ್ಲಿ ತಪ್ಪೇನೂ ಇಲ್ಲ’ ಎಂದರು.

‘ಮೊದಲ ಬಾರಿಗೆ ಶಾಸಕರಾದಾಗ ಮಂತ್ರಿಯಾದವರಲ್ಲಿ ನಾನೂ ಒಬ್ಬ. ಹೊಸ ಪೀಳಿಗೆ ಬೆಳೆಯಬೇಕು. ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕುಳಿತುಕೊಳ್ಳಲು ಸಾಧ್ಯ? ನಾನು ಸಚಿವನಾಗಿ 36 ವರ್ಷವಾಗಿದೆ. ಹೊಸ ಪೀಳಿಗೆ, ಹೊಸ ಆಲೋಚನೆಗಳು ಬರಬೇಕು. ಹೊಸಬರು ಸಂಪುಟಕ್ಕೆ ಬರಬೇಕು ಎಂದು ಬೆಂಬಲಿಸುವವರಲ್ಲಿ ನಾನೂ ಇದ್ದೇನೆ. ಹೊಸಬರನ್ನು ನಾವು ತಯಾರು ಮಾಡಬೇಕಲ್ಲ. ಈ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ’ ಎಂದರು.

‘ನಿಮ್ಮ ಮಂತ್ರಿಮಂಡಲದಲ್ಲಿ ಹೊಸ ಶಾಸಕರು ಸೇರ್ಪಡೆ ಆಗಲಿದ್ದಾರಾ’ ಎಂದು ಕೇಳಿದಾಗ, ‘ನಾನು ಮಂತ್ರಿಮಂಡಲ ಮಾಡುತ್ತೇನೆ ಎಂದು ಹೇಳಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅವರು ಸಂಚಿವ ಸಂಪುಟ ವಿಸ್ತರಣೆ ಮಾಡುವ ಕಾರಣಕ್ಕೆ ಕೆಲವರು ಪತ್ರ ಬರೆಯುತ್ತಾರೆ, ದೆಹಲಿಗೆ ಹೋಗುತ್ತಾರೆ, ಹೊರಗಡೆ ಹೋಗುತ್ತಾರೆ. ಅವರಿಗೂ ಆಸೆ ಇರುತ್ತದೆ’ ಎಂದು ತಿಳಿಸಿದರು.

ಶೇ 75ರಷ್ಟು ಕಾಮಗಾರಿಗಳು ಮುಕ್ತಾಯ:  ‘ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ನಮ್ಮ ಸರ್ಕಾರ ₹ 5,065 ಕೋಟಿ ವೆಚ್ಚ ಮಾಡುತ್ತಿದ್ದು, ಮುಖ್ಯಮಂತ್ರಿ ₹ 2 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಶೇ 75ರಷ್ಟು ಕಾಮಗಾರಿಗಳು ಮುಕ್ತಾಯವಾಗಿದ್ದು, ಏಪ್ರಿಲ್ ತಿಂಗಳ ಅಂತ್ಯದ ವೇಳೆಗೆ ಎಲ್ಲವೂ ಮುಕ್ತಾಯಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಆಗಬಾರದು ಎಂದಿದ್ದೇನೆ. 10 ಲಕ್ಷ ಇ ಖಾತಾ ದಾಖಲೆ ವಿತರಣೆ ಕಾರ್ಯಕ್ರಮ ಮಾಡಲಾಗುವುದು. ಇನ್ನು 30 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ಅವರ ವ್ಯಾಪಾರಕ್ಕೆ ವಾಹನ ನೀಡುವ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡಲಾಗುವುದು’ ಎಂದೂ ತಿಳಿಸಿದರು.

ಖಾಲಿ ಹುದ್ದೆಗಳ ಭರ್ತಿಗೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಕೇಳಿದಾಗ, ‘ಅವರ ಅವಧಿಯಲ್ಲಿ ಹುದ್ದೆಗಳನ್ನು ಯಾಕೆ ಭರ್ತಿ ಮಾಡಲಿಲ್ಲ? ಶೀಘ್ರದಲ್ಲೇ ನಾವು ಹುದ್ದೆಗಳಿಗೆ ನೇಮಕಾತಿ ಮಾಡುತ್ತೇವೆ. ನಿರುದ್ಯೋಗಿ ಯುವಕರಿಗೆ ತೊಂದರೆ ಆಗಬಾರದೆಂದು ಯುವನಿಧಿ ಯೋಜನೆ ನೀಡಿದ್ದೇವೆ. ಒಳ ಮೀಸಲಾತಿ ಸೇರಿದಂತೆ ಅನೇಕ ಕಾರಣಗಳಿಗೆ ನೇಮಕಾತಿ ವಿಳಂಬವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.