ADVERTISEMENT

ಬಿಜೆಪಿ ಎಷ್ಟು ಶಾಸಕರನ್ನಾದರೂ ಸೆಳೆಯಲಿ, ನಮ್ಮ ಗುರಿ ಪಕ್ಷ ಸಂಘಟನೆ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 7:49 IST
Last Updated 31 ಜುಲೈ 2020, 7:49 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್   

ಮಂಗಳೂರು:ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಬಂದಿರುವಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರು ಶುಕ್ರವಾರಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆಶೀರ್ವಾದ ಪಡೆದರು.

ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ಕಾಂಗ್ರೆಸ್ ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಇಡೀ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿ. ಎಲ್ಲ 224 ಮಂದಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ನಾನು ಭಾವಿಸಿದ್ದೆ. ಆದರೆ ಅವರು ಕೇವಲ 15 ಶಾಸಕರನ್ನು ಮಾತ್ರ ಯಾಕೆ ಹೇಳುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಬಿಜೆಪಿ ಎಷ್ಟು ಶಾಸಕರನ್ನಾದರೂ ತಮ್ಮ ಬಳಿ ಸೇರಿಸಿಕೊಳ್ಳಲಿ. ನಮ್ಮ ಗುರಿ ಪಕ್ಷ ಸಂಘಟನೆ. ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕರ್ತರೊಂದಿಗೆ ಇದೆ. ದೇಶದಾದ್ಯಂತ ನಮ್ಮ ಕಾರ್ಯಕರ್ತರ ಸಹಾಯದಿಂದ ಪಕ್ಷವನ್ನು ಬಲಪಡಿಸುತ್ತೇವೆ ಎಂದು ತಿರುಗೇಟು ನೀಡಿದರು.

ಕರ್ನಾಟಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ನಂತರ ದಕ್ಷಿಣ ಕನ್ನಡಕ್ಕೆ ಇದು ನನ್ನ ಮೊದಲ ಭೇಟಿ. ಇದು ಅದ್ಭುತ ಜಿಲ್ಲೆಯಾಗಿದ್ದು ಈ ಸ್ಥಳವು ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಗೆ ಹೆಸರುವಾಸಿಯಾಗಿದೆ. ನಾನು ಅಧಿಕಾರ ವಹಿಸಿಕೊಂಡಾಗಿನಿಂದ ಕೊರೊನಾ ಕಾರಣದಿಂದ ಪ್ರಯಾಣ ಮಾಡಲು ಸಾಧ್ಯವಾಗಿಲ್ಲ. ಈಗ ನನಗೆ ರಾಜಕೀಯಕ್ಕೆ ಉತ್ತೇಜನ ನೀಡಿದ ಹಾಗೂ ಹಿರಿಯ ನಾಯಕರಾದ ಜನಾರ್ದನ ಪೂಜಾರಿ, ಆಸ್ಕರ್ ಫರ್ನಾಂಡಿಸ್ ಅವರ ಆಶೀರ್ವಾದ ಪಡೆಯಲು ಮಂಗಳೂರಿಗೆ ಬಂದಿದ್ದೇನೆ ಎಂದು ಹೇಳಿದರು.

ADVERTISEMENT

ಬಿಷಪ್ ಅವರು ಶಿವಕುಮಾರ್ ಅವರನ್ನು ಸನ್ಮಾನಿಸಿದರು.

ಕಾಂಗ್ರೆಸ್ ಹಲವಾರು ವರ್ಷಗಳಿಂದ ಮಹತ್ತರವಾದ ಕೆಲಸಗಳನ್ನು ಮಾಡುತ್ತಿದ್ದು ಅದನ್ನು ಮುಂದುವರೆಸಿದೆ. ನಿಮ್ಮ ಮುಂದಿನ ಕೆಲಸಗಳಿಗಾಗಿ ನಿಮಗೆ ಆಶೀರ್ವದಿಸುತ್ತೇನೆ. ಜನರ ಜೀವನ ಸುಧಾರಣೆಗಾಗಿ ಉತ್ತಮ ಕಾರ್ಯಗಳನ್ನು ಮಾಡುತ್ತಲ್ಲೇ ಇರಿ ಎಂದು ಬಿಷಪ್‌ ಹಾರೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.