
ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಕರ್ನಾಟಕದಲ್ಲಿ ಖಾಲಿ ಹುದ್ದೆಗಳನ್ನು ಹಗರಣ ರಹಿತವಾಗಿ ತುಂಬಲು ಕಾಂಗ್ರೆಸ್ ಸರ್ಕಾರವು ಕ್ರಮ ವಹಿಸಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯುವಕರ ಸಮಸ್ಯೆಗಳನ್ನು ನಮ್ಮ ಸರ್ಕಾರ ಬಗೆಹರಿಸಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಸಂದೇಶ ನೀಡುತ್ತೇವೆ’ ಎಂದು ತಿಳಿಸಿದರು.
‘ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹುದ್ದೆ ಭರ್ತಿ ಮಾಡಲು ಆಗಲಿಲ್ಲ. ಅವರ ಸಮಯದಲ್ಲಿ ಹಗರಣಗಳು ಆದವು. ನಾವು ಯುವಕರ ನೋವು ಅರ್ಥ ಮಾಡಿಕೊಂಡಿದ್ದೇವೆ. ಒಳಮೀಸಲು ವಿಚಾರದಿಂದ ಅಡಚಣೆಯಾಗಿದೆ’ ಎಂದು ಹೇಳಿದರು.
‘ನಮ್ಮ ಮೆಟ್ರೊ ಜಾಲ ವಿಸ್ತರಣೆ ಸಂಬಂಧ ಸಮೀಕ್ಷೆ ಕಾರ್ಯ ನಡೆದಿದೆ. ಡಬಲ್ ಡೆಕರ್ ವಿಚಾರವಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ಕೇಳಿರುವುದರಿಂದ ಅದಕ್ಕೆ ಉತ್ತರ ನೀಡಲು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ’ ಎಂದು ತಿಳಿಸಿದರು.
‘ಹಣ ಲಭ್ಯತೆ ಇಲ್ಲದೇ ಇರುವ ಕಾರಣಕ್ಕೆ ಕಾಮಗಾರಿಗಳನ್ನು ತೆಗೆದುಕೊಳ್ಳಬೇಡಿ ಎಂದು ಅನೇಕ ಗುತ್ತಿಗೆದಾರರಿಗೆ ಸಲಹೆ ನೀಡಿದ್ದರೂ, ಒಂದಷ್ಟು ಜನ ಕಾಮಗಾರಿಗಳನ್ನು ತೆಗೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿಭಟನೆ ನಡೆಸುವುದಾಗಿ ಹೇಳಿರುವ ಬಗ್ಗೆ ಅವರೊಂದಿಗೆ ಚರ್ಚಿಸುತ್ತೇನೆ’ ಎಂದರು.