ADVERTISEMENT

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಕಾಂಗ್ರೆಸ್‌ಗೆ ರಾಜೀನಾಮೆ ನೀಡಬೇಕಿತ್ತು: ಅಶೋಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಆಗಸ್ಟ್ 2025, 13:21 IST
Last Updated 26 ಆಗಸ್ಟ್ 2025, 13:21 IST
<div class="paragraphs"><p>ಆರ್. ಅಶೋಕ, ಡಿ.ಕೆ. ಶಿವಕುಮಾರ್</p></div>

ಆರ್. ಅಶೋಕ, ಡಿ.ಕೆ. ಶಿವಕುಮಾರ್

   

ಬೆಂಗಳೂರು: ಸದನದಲ್ಲಿ ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆ ಹಾಡಿ ವಿವಾದಕ್ಕೀಡಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದರು.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, 'ಡಿ.ಕೆ. ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ ಕ್ಷಮೆ ಕೇಳಬಾರದಿತ್ತು. ಒತ್ತಡ ಇದ್ದಿದ್ದರೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಿತ್ತು' ಎಂದಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಬರೆದುಕೊಂಡಿರುವ ಅಶೋಕ, 'ನಮಸ್ತೇ ಸದಾ ವತ್ಸಲೇ ಮಾತೃಭೂಮೇ' ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಪ್ರಶ್ನಿಸಿದ್ದಾರೆ.

'ಆರ್‌ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. 'ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು'. ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ?' ಎಂದಿದ್ದಾರೆ.

'ಒಂದು ಕಡೆ ವಿಧಾನಸೌಧದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ?' ಎಂದು ಹೇಳಿದ್ದಾರೆ.

'ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿ.ಕೆ ಹರಿಪ್ರಸಾದ್ ಅವರು ಹೇಳಿದ್ದಕ್ಕೆ ಕ್ಷಮೆ ಕೇಳಿದರಾ?' ಎಂದು ಟೀಕಿಸಿದ್ದಾರೆ.

'ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು' ಎಂದಿದ್ದಾರೆ.

'ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ' ಎನ್ನುವ ಮಾತಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ 'ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು' ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ' ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.