ಬೆಂಗಳೂರು: ‘ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುವ ಬದಲು ಬಾಯಿ ಮುಚ್ಚಿಕೊಳ್ಳಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ‘ಮತ ಅಧಿಕಾರ ಯಾತ್ರೆ'ಯಲ್ಲಿ ಭಾಗವಹಿಸಿರುವ ಅವರು ಸುದ್ದಿಗಾರರ ಜೊತೆ ಮಾತನಾಡಿ, ‘ಬಿಜೆಪಿಯಲ್ಲಿ ಎರಡು ಬಣಗಳಿವೆ. ಹೀಗಾಗಿ, ಈ ರೀತಿ ಮಾಡುತ್ತಿದ್ದಾರೆ. ಅವರು ತಮ್ಮ ವೈಫಲ್ಯಗಳನ್ನು ನಮ್ಮ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಸತ್ಯಾಂಶವನ್ನು ಜನರ ಮುಂದಿಡುತ್ತಿದ್ದೇವೆ’ ಎಂದರು.
‘ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಬಿಹಾರದವರೆಗೆ ಧ್ವನಿ ಎತ್ತಿರುವ ವಿಚಾರದ ಬಗ್ಗೆ ಇಡೀ ದೇಶವೇ ಚರ್ಚಿಸುತ್ತಿದೆ. ಅವರ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ 'ವೋಟ್ ಅಧಿಕಾರ ಯಾತ್ರೆ' ದೇಶದ ಪಾಲಿಗೆ ಗೇಮ್ ಚೇಂಜರ್ ಆಗಲಿದೆ’ ಎಂದರು.
‘ರಾಹುಲ್ ಗಾಂಧಿ ಅವರು ತಮಗಾಗಿ ಈ ಹೋರಾಟ ಮಾಡುತ್ತಿಲ್ಲ. ಸಂವಿಧಾನದತ್ತವಾಗಿ ದೇಶದ ಜನಸಾಮಾನ್ಯರಿಗೆ ಸಿಕ್ಕಿರುವ ಹಕ್ಕಿನ ರಕ್ಷಣೆಗೆ ಹೋರಾಡುತ್ತಿದ್ದಾರೆ. ಕರ್ನಾಟಕದಲ್ಲಿ ಏನಾಗಿದೆ ಎನ್ನುವುದು ನನಗೆ ಗೊತ್ತಿದೆ. ಮತದಾರರು ತಮ್ಮ ಹಕ್ಕನ್ನು ಪಡೆಯಲು ಅವಕಾಶ ಮಾಡಿಕೊಟ್ಟಿರುವ ಸುಪ್ರೀಂ ಕೋರ್ಟ್ ಬಗ್ಗೆ ಹೆಮ್ಮೆ ಇದೆ’ ಎಂದರು.
‘ಬಿಹಾರದ ಜನ ಬದಲಾವಣೆ ಬಯಸಿದ್ದಾರೆ. ಇಲ್ಲಿನ ಯುವಕರು ಕೂಡ ಬೀದಿಗಿಳಿದು ಮಹಾಘಟಬಂಧನಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಮಹಾಘಟಬಂಧನ ನೀಡಿರುವ ಗ್ಯಾರಂಟಿಗಳು ಜನರಿಗೆ ನೆರವಾಗಲಿದ್ದು, ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ಕಳೆದ ಬಾರಿ ಮಹಾಘಟಬಂಧನ ಅಲ್ಪಅಂತರದಲ್ಲಿ ಸೋತಿತ್ತು. ಈ ಬಾರಿ ಗೆದ್ದೇ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.