ADVERTISEMENT

ಡಿ.ಕೆ.ಶಿ ಅಕ್ರಮ ಆಸ್ತಿ : ಸಿಬಿಐ ತನಿಖೆ ಪ್ರಶ್ನಿಸಿದ ಅರ್ಜಿ ವಿಚಾರಣೆ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 14:18 IST
Last Updated 3 ಫೆಬ್ರುವರಿ 2023, 14:18 IST
   

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಶಿವಕುಮಾರ್ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು.

ಈ ಸಂಬಂಧ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ವಿಚಾರಣೆ ನಡೆಸುವ ಹೈಕೋರ್ಟ್‌ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಶುಕ್ರವಾರ ವಿಚಾರಣೆಗೆ ಕೈಗೆತ್ತಿಕೊಂಡರು.

ವಿಚಾರಣೆ ವೇಳೆ ಸಿಬಿಐ ಪರ ವಕೀಲರು ಹಾಜರಿರಲಿಲ್ಲ. ಅವರ ಪರ ಕಿರಿಯ ವಕೀಲರು ಹಾಜರಾಗಿ ವಿಚಾರಣೆ ಮುಂದೂಡುವಂತೆ ಕೋರಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಿವಕುಮಾರ್ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ಎಚ್.ಜಾಧವ್‌, ಸಿಬಿಐ ಪರ ವಕೀಲರ ಗೈರು ಹಾಜರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಅಂತೆಯೇ, ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಆದರೆ, ಸಿಬಿಐ ಪರವಾದ ಕಿರಿಯ ವಕೀಲರ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಿತು.

ADVERTISEMENT

‘ಸತಾಯಿಸಲಾಗುತ್ತಿದೆ‘: ಕಳೆದ ವಿಚಾರಣೆ ವೇಳೆ ಸಿ.ಎಚ್‌.ಜಾಧವ್‌, ‘ಶಾಸಕ ಡಿ.ಕೆ.ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿರುವ ಕಾರಣಕ್ಕಾಗಿ ಕಿರುಕುಳ ನೀಡಲಾಗುತ್ತಿದ್ದು ಅವರ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಹತ್ತಿರವಾಗುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಅವರಿಗೆ ತೊಂದರೆ ನೀಡಬೇಕೆಂದು ಸತಾಯಿಸಲಾಗುತ್ತಿದೆ’ ಎಂದು ನ್ಯಾಯಪೀಠಕ್ಕೆ ಅರುಹಿದ್ದರು.

‘ಅರ್ಜಿದಾರರು ಸಾರ್ವಜನಿಕ ಸೇವಕ. ಅವರ ವಿರುದ್ಧ ದಾಖಲಿಸಿರುವ ಈ ಪ್ರಕರಣದಲ್ಲಿ ಅವರ ಕುಟುಂಬದ ಸದಸ್ಯರೆಲ್ಲರ ಆದಾಯವನ್ನು ಪರಿಗಣಿಸಲಾಗಿದೆ. ಜಾಮೀನು ದೊರೆತ ಮೇಲೆ ಜಾರಿ ನಿರ್ದೇಶನಾಲಯದ ಮಾಹಿತಿ ಅನುಸಾರ ಸಿಬಿಐ ಕೇಸು ದಾಖಲಿಸಿದೆ. ಇದೆಲ್ಲಾ ಅರ್ಜಿದಾರರಿಗೆ ಕೇವಲ ಕಿರುಕುಳ ನೀಡಬೇಕೆಂಬ ದುರುದ್ದೇಶಪೂರಿತ ಕ್ರಮವಾಗಿದೆ’ ಎಂದ ಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು.

ಪ್ರಕರಣವೇನು?: ‘ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 13 (2), 13 (1)(ಇ) ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ. ‘ಸಿಬಿಐ ದಾಖಲಿಸಿರುವ ಈ ಎಫ್‌ಐಆರ್‌ ಕಾನೂನು ಬಾಹಿರವಾಗಿದ್ದು ಇದನ್ನು ರದ್ದುಗೊಳಿಸಬೇಕು’ ಎಂದು ಕೋರಿ ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.