ADVERTISEMENT

ಅಪೂರ್ಣ ಯೋಜನೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ಡಿ. ಕೆ ಸುರೇಶ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಮಾರ್ಚ್ 2023, 13:14 IST
Last Updated 12 ಮಾರ್ಚ್ 2023, 13:14 IST
ಡಿ.ಕೆ ಸುರೇಶ್‌
ಡಿ.ಕೆ ಸುರೇಶ್‌    

ಬೆಂಗಳೂರು: ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ವೇಳೆ ತಮ್ಮನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ, ಈ ಅಪೂರ್ಣ ಯೋಜನೆಯನ್ನು ಕೇವಲ ಚುನಾವಣಾ ಗಿಮಿಕ್‌ಗಾಗಿ ಉದ್ಘಾಟಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ ಸುರೇಶ್‌ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗ ಪತ್ರ ಬರೆದಿರುವ ಡಿ.ಕೆ ಸುರೇಶ್‌, ಹಲವು ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.

‘ತಾವು ಈ ದಿನ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟಿಸಿದ್ದೀರಿ. ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಕನಿಷ್ಟ ಸೌಜನ್ಯ ತೋರದಿರುವುದಕ್ಕೆ ನಾನು ತಮಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ. ಈ ರಾಷ್ಟ್ರೀಯ ಹೆದ್ದಾರಿಯ ಬಹುಭಾಗವು ನಾನು ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾದುಹೋಗಿದ್ದು, ಇಲ್ಲಿನ ಜನತೆ ನನ್ನನ್ನು ತಮ್ಮ ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಆದರೆ ನಿಮ್ಮ ಕ್ಷುಲ್ಲಕ ರಾಜಕಾರಣವು ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆಮಾಚಿದೆ’ ಎಂದು ಟೀಕಿಸಿದ್ದಾರೆ.

ADVERTISEMENT

‘ಈ ರಾಷ್ಟ್ರೀಯ ಹೆದ್ದಾರಿಯ ಶೇ. 30ರಷ್ಟು ಕಾಮಗಾರಿ ಇನ್ನೂ ಬಾಕಿ ಇರುವುದು ನಿಮ್ಮ ಗಮನದಲ್ಲಿದೆ ಎಂದು ಭಾವಿಸಿದ್ದೇನೆ. ಆದರೂ ನೀವು ಈ ಅಪೂರ್ಣ ಯೋಜನೆಯನ್ನು ಕೇವಲ ಚುನಾವಣಾ ಗಿಮಿಕ್‌ಗಾಗಿ ಇಂದು ಉದ್ಘಾಟಿಸಿದ್ದೀರಿ. 2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಅಭಿವೃದ್ಧಿ ಪಡಿಸಲು ಮೊದಲು ಪ್ರಸ್ತಾವನೆ ಸಲ್ಲಿಸಿದ್ದನ್ನು ತಮಗೆ ನೆನಪಿಸಬಯಸುತ್ತೇನೆ’ ಎಂದು ಅವರು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ.

‘ಅಲ್ಲದೇ ರೈತರ ಭೂಮಿ ಸುಗಮ ಸ್ವಾಧೀನಕ್ಕೆ ಭೂ ಸ್ವಾಧೀನ ಕಾಯಿದೆಗೆ ತಿದ್ದುಪಡಿ ತರದೇ ಹೋಗಿದ್ದರೆ ಈ ಯೋಜನೆ ಇಷ್ಟು ಸುಲಭವಾಗಿ ಕಾರ್ಯಸಾಧು ಆಗುತ್ತಿರಲಿಲ್ಲ ಎಂಬುದನ್ನು ನಾವು ಮರೆಯಬಾರದು. ಇದರ ಸಂಪೂರ್ಣ ಶ್ರೇಯಸ್ಸು ಶ್ರೀಯುತ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಸಲ್ಲಬೇಕು’ ಎಂದು ಅವರು ಹೇಳಿದ್ದಾರೆ.

‘ಇನ್ನು ಕೇಂದ್ರಕ್ಕೆ ಅತಿಹೆಚ್ಚು ತೆರಿಗೆ ಪಾವತಿಸುವ ಎರಡನೇ ದೊಡ್ಡ ರಾಜ್ಯ ಕರ್ನಾಟಕದ ಸುಮಾರು 5,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯು ಪ್ರಧಾನಿ ಕಚೇರಿ ಹಾಗೂ ನೀತಿ ಆಯೋಗದ ಮುಂದೆ ಕಳೆದ 8 ವರ್ಷಗಳಿಂದ ಧೂಳು ಹಿಡಿಯುತ್ತಾ ಕೂಳಿತಿದೆ. ಈ ಕುರಿತು ನಿಮ್ಮ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕರ್ನಾಟಕ ಅಭಿವೃದ್ಧಿ ವಿರುದ್ದದ ನಿಮ್ಮ ನಿಲುವು ಹಾಗೂ ಮಲತಾಯಿ ಧೋರಣೆಗೆ ಹಿಡಿದ ಕೈಗನ್ನಡಿ’ ಎಂದು ಡಿ.ಕೆ ಸುರೇಶ್‌ ಆರೋಪಿಸಿದ್ದಾರೆ.

‘ಕರ್ನಾಟಕದ ಅಪೂರ್ಣ ಯೋಜನೆಗಳನ್ನು ಉದ್ಘಾಟಿಸುತ್ತಿರುವುದು ಕರ್ನಾಟಕದ ಜನತೆಯನ್ನು ಹೇಗಾದರೂ ವಂಚಿಸಿ ಚುನಾವಣಾ ಗೆಲುವು ಸಾಧಿಸಬಹುದು ಎನ್ನುವ ನಿಮ್ಮ ಹತಾಶ ಪ್ರಯತ್ನಕ್ಕೆ ಹಿಡಿದ ಕೈಗನ್ನಡಿ. ನಿಮ್ಮ ಈ ವಿಕೃತ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ’ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.