ಬೆಂಗಳೂರು: ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಡಿ.ಕೆ ಶಿವಕುಮಾರ್ ಅವರು ಜಾಮೀನು ಪಡೆದು ಶನಿವಾರ ಬೆಂಗಳೂರಿಗೆ ಆಗಮಿಸಿದರು. ದೇವನಹಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಮೆರವಣಿಗೆ ಮೂಲಕ ಬರುವ ವೇಳೆ ಅವರು ಜೆಡಿಎಸ್ ಬಾವುಟ ಹಿಡಿದಿದ್ದು ಜನತಾದಳದ ಕಾರ್ಯಕರ್ತರಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿದೆ.
ಮೆರವಣಿಗೆಯಲ್ಲಿ ಬರುತ್ತಿದ್ದ ಡಿ.ಕೆ ಶಿವಕುಮಾರ್ ಅವರಿಗೆ ಯಲಹಂಕ ಬಳಿ ಜೆಡಿಎಸ್ ಕಾರ್ಯಕರ್ತರು ಪಕ್ಷದ ಬಾವುಟ ನೀಡಿದರು. ಡಿ.ಕೆ ಶಿವಕುಮಾರ್ ಅವರೂ ಬಾವುಟವನ್ನು ಅಷ್ಟೇ ಪ್ರೀತಿಯಿಂದ ಸ್ವೀಕರಿಸಿ ಒಂದು ಬಾರಿ ಗಾಳಿಯಲ್ಲಿ ಹಾರಾಡಿಸಿ ಮತ್ತೆ ಕಾರ್ಯಕರ್ತರ ಕೈಗಿಟ್ಟರು. ಈ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿವೆ.
ಅದರಲ್ಲಿಯೂ ಜೆಡಿಎಸ್ ಬೆಂಬಲಿತ ಫೇಸ್ಬುಕ್ ಪೇಜ್ಗಳು ಈ ಫೋಟೋವನ್ನು ಹೆಚ್ಚು ಹಂಚಿಕೊಂಡಿವೆ. ಹಲವರು ತಮ್ಮ ವೈಯಕ್ತಿಕ ಖಾತೆಗಳಲ್ಲೂ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
1985ರಲ್ಲಿ ಸಾತನೂರು ವಿಧಾನಸಭೆ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ಗೆ ಈ ವರೆಗಿನ ಎಲ್ಲ ಚುನಾವಣೆಗಳಲ್ಲೂ ಪ್ರತಿಸ್ಪರ್ಧಿಯಾಗಿದ್ದದ್ದು ಜೆಡಿಎಸ್ನ ಅಭ್ಯರ್ಥಿಗಳೇ. ಜೆಡಿಎಸ್ ವಿರುದ್ಧವೇ ರಾಜಕಾರಣ ಮಾಡಿಕೊಂಡು ಬಂದ ಡಿ.ಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಜತೆಗಿನ ಮಿತ್ರತ್ವದ ಹಿನ್ನೆಲೆಯಲ್ಲಿ ಜೆಡಿಎಸ್ ಮನಸ್ಸುಗಳಿಗೆ ಹತ್ತಿರವಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.