ಬೆಂಗಳೂರು: ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘವು (ಐಎಂಎ) ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗ (ಒಪಿಡಿ) ಬಂದ್ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರು ಕೂಡ ಅಷ್ಟಾಗಿ ಆಸ್ಪತ್ರೆಗಳ ಕಡೆಗೆ ಮುಖ ಹಾಕಲಿಲ್ಲ. ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಒಪಿಡಿ ಸೇವೆಯನ್ನು ಬಹಿಷ್ಕರಿಸುವಂತೆ ಐಎಂಎ ಸೂಚಿಸಿತ್ತು. ಆದರೆ, ರೋಗಿಗಳಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಆಸ್ಪತ್ರೆಗಳು ಮಧ್ಯಾಹ್ನದ ಬಳಿಕ ಒಪಿಡಿ ಸೇವೆ ಪ್ರಾರಂಭಿಸಿದ್ದವು.
ಹೊರರೋಗಿ ವಿಭಾಗ ಹೊರತುಪಡಿಸಿ ಉಳಿದ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗಲಿಲ್ಲ. ಸೇವೆಗೆ ಹಾಜರಾಗಿದ್ದ ಎಲ್ಲ ವೈದ್ಯರು ಕಪ್ಪು ಪಟ್ಟಿ ಧರಿಸುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿದರು. ಆಸ್ಪತ್ರೆಗಳ ಆವರಣದಲ್ಲಿ ಒಪಿಡಿ ಬಂದ್ ಎಂಬ ಫಲಕವನ್ನು ಹಾಕಿದ್ದರೂ ಆಸ್ಪತ್ರೆಗಳ ಆವರಣದಲ್ಲಿಯೇ ರೋಗಿಗಳು ಮಧ್ಯಾಹ್ನದವರೆಗೂ ಕಾದು ಮನೆಗೆ ತೆರಳಿದರು. ಕೋವಿಡ್ ಹಾಗೂ ತುರ್ತು ಚಿಕಿತ್ಸೆಗಳನ್ನು ಎಂದಿನಂತೆ ನೀಡಲಾಯಿತು. ಸಂಜೆಯ ವೇಳೆಗೆ ಹೊರ ರೋಗಿಗಳ ವಿಭಾಗವು ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾದವು.
ಸರ್ಕಾರಿ ಆಸ್ಪತ್ರೆಗಳಲ್ಲಿಯೂ ರೋಗಿಗಳ ಸಂಖ್ಯೆಯಲ್ಲಿ ಇಳಿಕೆಯಾಗಿತ್ತು. ಐಎಂಎ ನಡೆಯನ್ನು ಖಂಡಿಸಿ, ಕೆಲ ಆಯುರ್ವೇದ ಆಸ್ಪತ್ರೆಗಳು ಹಾಗೂ ಕ್ಲಿನಿಕ್ಗಳು ರೋಗಿಗಳಿಗೆ ಉಚಿತವಾಗಿ ವೈದ್ಯಕೀಯ ಸೇವೆ ನೀಡಿದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.