ಬೆಂಗಳೂರು:ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಎಚ್ಸಿ) ಮಾದರಿಯಲ್ಲಿಆರೋಗ್ಯ ಇಲಾಖೆಯ ವೈದ್ಯರಿಗೆ ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಸದಸ್ಯರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಕೋವಿಡ್ ನಿಯಂತ್ರಣಕ್ಕಾಗಿ ಸಾಕಷ್ಟು ಶ್ರಮಿಸುತ್ತಿದ್ದಾರೆ. ಇಂಥವರಿಗೆ ಸಿಜಿಎಚ್ಸಿ ಮಾದರಿ ವೇತನ ಪರಿಷ್ಕರಣೆ ಮಾಡುವ ಮೂಲಕ ಅವರ ನೆರವಿಗೆ ಧಾವಿಸುವಂತೆ ವೈದ್ಯಾಧಿಕಾರಿಗಳ ಸಂಘದ ಸದಸ್ಯರು ಮನವಿ ಮಾಡಿದರು. ಈ ವೇಳೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಕೂಡಾ ಇದ್ದರು. ಅವರು ಕೂಡ ಮುಖ್ಯಮಂತ್ರಿಗೆ ವೇತನ ಪರಿಷ್ಕರಿಸುವ ಬಗ್ಗೆ ಮನವರಿಕೆ ಮಾಡಿದರು. ಇದಕ್ಕೆ ಯಡಿಯೂರಪ್ಪ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದರು.
‘ವೈದ್ಯರ ವೇತನ ಪರಿಷ್ಕರಣೆ ಬೇಡಿಕೆ ಹಲವಾರು ವರ್ಷಗಳಿಂದ ಈಡೇರಿಲ್ಲ. ಕೆಲವು ರಾಜ್ಯಗಳು ಸಿಜಿಎಚ್ಎಸ್ ಮಾದರಿಯಲ್ಲಿ ವೈದ್ಯರ ವೇತನ ಪರಿಷ್ಕರಣೆ ಮಾಡಿದ್ದು, ನಮ್ಮಲ್ಲೂ ಇದನ್ನು ತ್ವರಿತವಾಗಿ ಕಾರ್ಯಗತಗೊಳಿಸುವಂತೆ ಮನವಿ ಮಾಡಲಾಗಿದೆ’ ಎಂದು ಸಂಘದ ಅಧ್ಯಕ್ಷ ಡಾ.ಜಿ.ಎ. ಶ್ರೀನಿವಾಸ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.