ಬೆಂಗಳೂರು:ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಇಬ್ಬರು ಪ್ರಾಧ್ಯಾಪಕರನ್ನು 2019ರಲ್ಲಿ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಗೆ ಕಾಯಂ ಆಗಿ ವರ್ಗಾವಣೆ ಮಾಡಲಾಗಿದ್ದ ಆದೇಶವನ್ನು ಏಕಾಏಕಿ ಹಿಂಪಡೆದಿರುವುದನ್ನು ಪ್ರಶ್ನಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಅಂಗರಚನಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಪಾರ್ಥಸಾರಥಿ ಮತ್ತು ಶರೀರ ಕ್ರಿಯಾಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಶ್ರೀನಿವಾಸ ನಾಯ್ಡು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಡಿ.ಆರ್.ರವಿಶಂಕರ್, ‘ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಅರ್ಜಿದಾರರ ವರ್ಗಾವಣೆಯನ್ನುತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂಬರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಆದೇಶ ಕಾನೂನು ಬಾಹಿರವಾಗಿದೆ. ಆದ್ದರಿಂದ, ಕೂಡಲೇ ಈ ಆದೇಶವನ್ನು ರದ್ದುಪಡಿಸಬೇಕು‘ ಎಂದು ಕೋರಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಅರ್ಜಿದಾರರನ್ನು ಈಗಿರುವ ಸ್ಥಾನದಿಂದ ಪಲ್ಲಟಗೊಳಿಸಬಾರದು‘ ಎಂದು ಮಧ್ಯಂತರ ಆದೇಶ ನೀಡಿ, ಪ್ರತಿವಾದಿಗಳಾದ ಅಟಲ್ ಬಿಹಾರಿ ವಾಜಪೇಯಿವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರು ಹಾಗೂಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಿಗೂ ನೋಟಿಸ್ ಜಾರಿಗೊಳಿಸಿತು. ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.