ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯಡಿ ಕಾರ್ಯನಿರ್ವಹಿಸುವ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯನ್ನು ಪುನರ್ ರಚಿಸಿರುವ ಸರ್ಕಾರ, ಸಾಹಿತಿ ದೊಡ್ಡರಂಗೇಗೌಡ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ರಾ.ನಂ. ಚಂದ್ರಶೇಖರ್, ಆರ್. ದೊಡ್ಡೇಗೌಡ, ಪತ್ರಕರ್ತ ಎಂ. ಮಂಜುನಾಥ ಬಮ್ಮನಕಟ್ಟಿ, ಕಣಿಯನಹುಂಡಿಯ ನಿ. ಗಿರಿ ಗೌಡ, ಪ್ರಕಾಶಕ ಡಿ.ಎನ್. ಲೋಕಪ್ಪ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಕಾಶಕ ಸಂಘದ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಧಾರವಾಡ ವಿಶ್ವವಿದ್ಯಾಲಯದ ಪ್ರಸಾರಾಂಗ ನಿರ್ದೇಶಕರು, ಕರ್ನಾಟಕ ವಿಜ್ಞಾನ ಪರಿಷತ್ತಿನ ಅಧ್ಯಕ್ಷರು,ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ.ಎ.ವೈ. ಅಸುಂಡಿ, ಕರ್ನಾಟಕ ಕನ್ನಡ ಬರಹಗಾರರು ಮತ್ತು ಪ್ರಕಾಶ ಕರ ಸಂಘದ ಅಧ್ಯಕ್ಷರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಸದಸ್ಯ ಕಾರ್ಯದರ್ಶಿಯಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರು ಮುಂದುವರಿಯಲಿದ್ದಾರೆ.
ಈ ನೇಮಕಾತಿಯು ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಸಮಿತಿ ಅಸ್ತಿತ್ವ ಬರುವವರೆಗೆ ಜಾರಿಯಲ್ಲಿ ಇರಲಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ. ಕನ್ನಡ ಮತ್ತು ಆಂಗ್ಲ ಭಾಷೆಯ ಪುಸ್ತಕಗಳನ್ನು ಹೊರತುಪಡಿಸಿ, ಇತರೆ ಭಾರತೀಯ ಭಾಷೆಗಳ ಪುಸ್ತಕಗಳನ್ನು ಆಯ್ಕೆ ಮಾಡಲು ಭಾಷಾ ಪರಿಣಿತರ ಸಲಹೆ ಪಡೆಯಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.