ADVERTISEMENT

ಕಾಂಗ್ರೆಸ್‌ ನಾಯಕರಿಗೆ ಪ್ರವೇಶ ಬೇಡ: ಡಿವಿಎಸ್‌

ಭೇಟಿಗೆ ಅವಕಾಶ ನೀಡಿದರೆ ಗಲಭೆ ಸಾಧ್ಯತೆ ಎಂದ ಕೇಂದ್ರ ಸಚಿವ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2019, 19:22 IST
Last Updated 20 ಡಿಸೆಂಬರ್ 2019, 19:22 IST
ಡಿ.ವಿ.ಸದಾನಂದಗೌಡ
ಡಿ.ವಿ.ಸದಾನಂದಗೌಡ   

ಬೆಂಗಳೂರು: ಹಿಂಸಾಚಾರಕ್ಕೆ ತುತ್ತಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ಸೇರಿ ಯಾವುದೇ ನಾಯಕರಿಗೂ ಪ್ರವೇಶ ನೀಡಬಾರದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ ಅವರು ಈ ವಿಷಯ ತಿಳಿಸಿದರು.

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಸ್ಸಾಂ ಮತ್ತು ಇತರೆಡೆಗಳಲ್ಲಿ ಪ್ರತಿಭಟನೆಗಳು ನಡೆದ ಎರಡು ಮೂರು ದಿನಗಳ ನಂತರ ಮಂಗಳೂರಿನಲ್ಲಿ ಯೋಜಿತ ರೀತಿಯಲ್ಲಿ ಪ್ರತಿಭಟನೆ ನಡೆದಿದೆ. ಇದಕ್ಕೆ ಕೇರಳದಿಂದ ಯುವಕರನ್ನು ಕರೆಸಿಕೊಳ್ಳಲಾಗಿದೆ. ಕಾಂಗ್ರೆಸ್‌ ಪಕ್ಷ ಇದಕ್ಕೆ ಸಹಾಯ ಮಾಡಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಶಾಸಕ ಯು.ಟಿ.ಖಾದರ್‌ ಅವರು ಬೆಂಕಿಗೆ ತುಪ್ಪ ಸುರಿಯುವಂತೆ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಪರಿಸ್ಥಿತಿಯ ಅವಲೋಕನದ ನೆಪದಲ್ಲಿ ಮಂಗಳೂರಿಗೆ ಸಿದ್ದರಾಮಯ್ಯ ಮತ್ತು ಜಮೀರ್‌ ಅಹಮದ್‌ ಸೇರಿ ಕಾಂಗ್ರೆಸ್‌ನ ಮುಖಂಡರಿಗೆ ಅವಕಾಶ ನೀಡಬಾರದು. ಅವಕಾಶ ನೀಡಿದರೆ, ಯುವಕರು ಪ್ರಚೋದಿಸಲ್ಪಟ್ಟು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಅಪಾಯವಿದೆ ಎಂದರು.

ಹಿಂಸೆ ಹೆಚ್ಚಲು ಕಾಂಗ್ರೆಸ್‌ ಕಾರಣ: ರಾಷ್ಟ್ರದಲ್ಲಿ ಭದ್ರತೆ ಮತ್ತು ಏಕತೆಗಾಗಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ, ಕಾಯ್ದೆಯ ಬಗ್ಗೆ ಸುಳ್ಳು ಮಾಹಿತಿ ಮತ್ತು ಅಪಪ್ರಚಾರದ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ನಡೆದಿದೆ. ಇದರಿಂದ ಹಿಂಸಾಚಾರ ಆಗಿದ್ದು, ಇದಕ್ಕೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ಶಾಸಕ ಯು.ಟಿ.ಖಾದರ್‌ ಅವರೇ ಕಾರಣ. ಪ್ರತಿಭಟನೆ ನಡೆಸಲು ಜನರಿಗೆ ಹಕ್ಕಿದೆ. ಶಾಂತಿಯುತ ಬೇಡಿಕೆಗಳ ಮೂಲಕ ತಮ್ಮ ಅಹವಾಲನ್ನು ಸರ್ಕಾರಕ್ಕೆ ಸಲ್ಲಿಸಬೇಕು. ರಾಜ್ಯ ಮತ್ತು ರಾಷ್ಟ್ರದ ಹಿತದೃಷ್ಟಿಯಿಂದ ಶಾಂತಿ– ಸುವ್ಯವಸ್ಥೆ ಕಾಪಾಡಬೇಕು ಎಂದು ಸವದಿ ತಿಳಿಸಿದರು.

‘ಹಿಂಸೆಗೆ ರಾಹುಲ್‌ ಪ್ರಚೋದನೆ’

‘ಕಾಂಗ್ರೆಸ್‌ ತನ್ನ ಓಟ್‌ ಬ್ಯಾಂಕ್‌ ಭದ್ರಪಡಿಸಿಕೊಳ್ಳಲು ದೇಶದಾದ್ಯಂತ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ. ಸೋನಿಯಾ ಗಾಂಧಿ ಮತ್ತು ಅವರ ಮಕ್ಕಳಾದ ರಾಹುಲ್‌ ಮತ್ತು ಪ್ರಿಯಾಂಕಾ ಅವರು ಮುಂಚೂಣಿಯಲ್ಲಿ
ದ್ದಾರೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ದೂರಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ತೊಂದರೆ ಆಗುವುದಿಲ್ಲ ಎಂದು ದೆಹಲಿಯ ಜಾಮಿಯಾ ಮಸೀದಿ ಇಮಾಮ್‌ ಬುಕಾರಿ ಅವರೇ ಹೇಳಿದ್ದಾರೆ. ಆದರೆ, ಕಾಂಗ್ರೆಸ್, ಪಿಎಫ್‌ಐ, ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ, ಎಸ್‌ಡಿಪಿಐ ಸಂಘಟನೆಗಳು ಮುಸ್ಲಿಂ ಯುವಕರು ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗುವಂತೆ ಪ್ರಚೋದಿಸುತ್ತಿವೆ. ಇವುಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.