ADVERTISEMENT

ಇಂದಿರಾ ಕ್ಯಾಂಟೀನ್‌ ಮುಚ್ಚಬೇಡಿ: ಬಿಎಸ್‌ವೈಗೆ ಪತ್ರ ಬರೆದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 20:57 IST
Last Updated 2 ಡಿಸೆಂಬರ್ 2020, 20:57 IST
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ   

ಬೆಂಗಳೂರು: 'ಇಂದಿರಾ ಕ್ಯಾಂಟೀನ್‌ನನ್ನು ಮುಚ್ಚಲು ವ್ಯವಸ್ಥಿತವಾಗಿ ಪ್ರಯತ್ನ ನಡೆಯುತ್ತಿರುವಂತೆ ಕಾಣುತ್ತಿದೆ’ ಎಂದು ಆರೋಪಿಸಿರುವ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಯಾವುದಕ್ಕೇ ಕಾರಣಕ್ಕೂ ಮುಚ್ಚಬಾರದು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

‘ಇಂದಿರಾ ಕ್ಯಾಂಟೀನ್‌ಗಳಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೆ ಸತಾಯಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕ್ಯಾಂಟೀನ್‌ಗಳಿಗೆ ಸುಮಾರು ₹ 28 ಕೋಟಿ ಬಿಡಗಡೆ ಮಾಡದೆ, ಸುಮಾರು ಆರು ತಿಂಗಳುಗಳಿಂದ ಬಾಕಿ ಉಳಿಸಿಕೊಳ್ಳಲಾಗಿದೆ. 198 ಕ್ಯಾಂಟೀನ್‌ಗಳಿಗೆ ನೀರಿನ ಸಂಪರ್ಕ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕೂಡಾ ಬಿಡಬ್ಲ್ಯೂಎಸ್‌ಎಸ್‌ಬಿ ಕಡಿತಗೊಳಿಸಿದೆ. ಅಲ್ಲದೆ, 12 ಅಡುಗೆ ಮನೆಗಳಿಗೂ ನೀರಿನ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

‘ಇಂದಿರಾ ಕ್ಯಾಂಟೀನ್‌ನ ಹೆಸರು ಬದಲಿಸಿ ರಾಜಕಾರಣ ಮಾಡಲು ಕೂಡಾ ಈ ಹಿಂದೆ ಪ್ರಯತ್ನ ನಡೆದಿತ್ತು’ ಎಂದೂ ಅವರು ದೂರಿದ್ದಾರೆ.

ADVERTISEMENT

‘ಕೋವಿಡ್‌ ಸಂಕಷ್ಟದ ಸಮಯದಲ್ಲಿ ದುಡಿಮೆ ಇಲ್ಲದೆ ಪರಿತಪಿಸುತ್ತಿರುವ ಜನರಿಗೆ ಇಂದಿರಾ ಕ್ಯಾಂಟೀನ್‌ ಮೂಲಕ ಉಚಿತ ಆಹಾರ ನೀಡಬೇಕೆಂದು ಈ ಹಿಂದೆ ಒತ್ತಾಯಿಸಿದ್ದೆ. ಇದಕ್ಕೆ ಹೆಚ್ಚೆಂದರೆ ₹ 200 ಕೋಟಿಯಿಂದ ₹ 250 ಕೋಟಿ ಖರ್ಚು ಬರಬಹುದು. ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಇಷ್ಟನ್ನೂ ಮಾಡದೆ ಮೀನಮೇಷ ಎನಿಸುತ್ತಿದೆ’ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.