ADVERTISEMENT

ಆರ್ಥಿಕ ಸಮಸ್ಯೆ ಇದ್ದರೂ ವಿದ್ಯಾರ್ಥಿ ವೇತನ ನಿಲ್ಲಿಸಬೇಡಿ: ಬಿ.ಎಸ್‌.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 8:19 IST
Last Updated 16 ಜೂನ್ 2020, 8:19 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ಆರ್ಥಿಕ ಸಮಸ್ಯೆ ಇದ್ದರೂ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದಾಗ ಈ ಸೂಚನೆ ನೀಡಿದರು.

ಇಲಾಖೆಯ ಕಾರ್ಯಕ್ರಮ ಅನುಷ್ಠಾನದಲ್ಲಿ 2019-20ನೇ ಸಾಲಿನಲ್ಲಿ ಶೇ. 97 ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.

ADVERTISEMENT

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ ಪಡೆದ ಅಭ್ಯರ್ಥಿಗಳಲ್ಲಿ ಇಬ್ಬರು ಐಎಎಸ್, ಇಬ್ಬರು ಐಪಿಎಸ್, 13 ಅಭ್ಯರ್ಥಿಗಳು ಐಆರ್‌ಎಸ್‌ ಸೇವೆಗೆ ಆಯ್ಕೆಯಾಗಿರುವುದು ಸೇರಿದಂತೆ ಒಟ್ಟು 268 ಅಭ್ಯರ್ಥಿಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಿ ವಿವಿಧ ಸೇವೆಗಳಿಗೆ ಸೇರ್ಪಡೆಯಾಗಿರುವ ಕುರಿತು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಇಲಾಖೆಯ ಕಾರ್ಯಕ್ರಮಗಳನ್ನು ಆದ್ಯತೆಗೆ ಅನುಸಾರ ಗುರುತಿಸಿ, ಅನುಷ್ಠಾನಗೊಳಿಸುವಂತೆಯೂ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.