ADVERTISEMENT

ಡಾ.ಅಭಿನವ ಅನ್ನದಾನ ಸ್ವಾಮೀಜಿ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 19:45 IST
Last Updated 22 ನವೆಂಬರ್ 2021, 19:45 IST
ಡಾ. ಅಭಿನವ ಅನ್ನದಾನ ಸ್ವಾಮೀಜಿ
ಡಾ. ಅಭಿನವ ಅನ್ನದಾನ ಸ್ವಾಮೀಜಿ   

ನರೇಗಲ್ (ಗದಗ ಜಿಲ್ಲೆ): ಗಜೇಂದ್ರಗಡ ತಾಲ್ಲೂಕಿನ ನರೇಗಲ್‌ ಹೋಬಳಿಯ ಹಾಲಕೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ.ಅಭಿನವ ಅನ್ನದಾನ ಸ್ವಾಮೀಜಿ (85) ಅವರು ಸೋಮವಾರ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ನ.16ರಂದು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ನಿಧನರಾದರು.ಈ ಮೊದಲು ಅವರು ಎರಡು ಬಾರಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಮಂಗಳವಾರ ಮಧ್ಯಾಹ್ನದವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4ಕ್ಕೆವೀರಶೈವ–ಲಿಂಗಾಯತ ವಿಧಿ ವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.

ADVERTISEMENT

ಬಾಗಲಕೋಟೆಯ‌ ಜಮಖಂಡಿ ತಾಲ್ಲೂಕಿನ ಬಿದರಿ, ಸ್ವಾಮೀಜಿ‌ಯವರ ಹುಟ್ಟೂರು. ಹಾಲಕೆರೆ ಸಂಸ್ಥಾನ ಮಠದಲ್ಲಿ ನವೆಂಬರ್‌ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅವರನ್ನು ತಮ್ಮ ಸ್ಥಾನಕ್ಕೆ ನೇಮಿಸಿ ಮಠದ ಅಧಿಕಾರ ನೀಡಿದ್ದರು.

‘ವೀರಶೈವ–ಲಿಂಗಾಯತ ಎರಡೂ ಒಂದೇ’ ಎಂದು ಪ್ರತಿಪಾದಿಸಿದ್ದರು.ವೀರಶೈವ- ಲಿಂಗಾಯತ ಸ್ವತಂತ್ರ ಧರ್ಮವನ್ನಾಗಿ ಪರಿಗಣಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಪ್ರತ್ಯೇಕ ಧರ್ಮ ಹೋರಾಟ ವಿರೋಧಿ ಬಣದ ನೇತೃತ್ವ ವಹಿಸಿದ್ದರು. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಶಿವಯೋಗ ಮಂದಿರದಲ್ಲಿ 2017ರಲ್ಲಿ ಬೃಹತ್‌ ಸಮಾವೇಶವನ್ನು ಆಯೋಜಿಸಿದ್ದರು.

‘ಸಂಗನಬಸವ ಸ್ವಾಮೀಜಿ’ಯಾಗಿ 1972ರಲ್ಲಿ ಹೊಸಪೇಟೆಯ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿಯಾಗಿ ಹಾಗೂ 1987ರಲ್ಲಿ ‘ಅಭಿನವ ಅನ್ನದಾನ ಸ್ವಾಮೀಜಿ’ ಎಂಬ ಹೆಸರಿನಿಂದ ಗದಗ ಜಿಲ್ಲೆಯ ಹಾಲಕೆರೆಯ ಅನ್ನದಾನೇಶ್ವರ ಮಠದ 12ನೇ ಪೀಠಾಧಿಪತಿಯಾಗಿ ನೇಮಕಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.