ADVERTISEMENT

ರಾಂಗ್‌ ನಂಬರ್‌ ಡಯಲ್ ಮಾಡಿದ ಡಿಕೆಶಿ: ಅಶ್ವತ್ಥನಾರಾಯಣ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 13 ಮೇ 2022, 9:52 IST
Last Updated 13 ಮೇ 2022, 9:52 IST
ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ
ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ   

ಬೆಂಗಳೂರು: ತಮ್ಮದೇ ಪಕ್ಷದ ನಾಯಕ ಎಂ.ಬಿ.ಪಾಟೀಲ ಮತ್ತು ನನ್ನ ಹೆಸರು ಹೇಳಿಕೊಂಡು ಡಿ.ಕೆ.ಶಿವಕುಮಾರ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದರು. ಆದರೆ ರಮ್ಯಾ ಅವರ ಟ್ವೀಟ್ ಇವರ ಬಣ್ಣವನ್ನು ಬಯಲು ಮಾಡಿತು. ರಾಂಗ್ ನಂಬರ್ ಡಯಲ್ ಮಾಡಿದ ಶಿವಕುಮಾರ್ ಪೆಚ್ಚು ಮೋರೆ ಹಾಕಿಕೊಂಡು ಓಡಾಡಬೇಕಾಗಿದೆ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಟ್ವೀಟ್ ಕಿತ್ತಾಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಶುಕ್ರವಾರ ಹೀಗೆ ಉತ್ತರಿಸಿದರು. 'ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಆದರೂ ಅವರು ನನ್ನನ್ನು ನಿರ್ನಾಮ ಮಾಡಲು ಬಂದು ಅವರೇ ನಿರ್ನಾಮವಾಗುತ್ತಿದ್ದಾರೆ’ ಎಂದು ಅವರು ಹರಿಹಾಯ್ದರು.

‘ಈ ಟ್ವೀಟ್ ಕಿತ್ತಾಟ ಕಾಂಗ್ರೆಸ್ಸಿನ ಆಂತರಿಕ ವಿಚಾರ. ಆದರೆ, ನನ್ನ ಹೆಸರನ್ನು ಇಲ್ಲಿ ಎಳೆದು ತಂದಿದ್ದರಿಂದ ನಾನು ಪ್ರತಿಕ್ರಿಯೆ ನೀಡುತ್ತಿದ್ದೇನಷ್ಟೆ. ಶಿವಕುಮಾರ್ ಅವರ ಮಾತುಗಳನ್ನು ಅವರ ಪಕ್ಷದ ನಾಯಕರುಗಳೇ ಖಂಡಿಸಿರುವುದು ಸ್ವಾಗತಾರ್ಹ. ವೈಯಕ್ತಿಕ ಸಂಬಂಧ ಮತ್ತು ರಾಜಕಾರಣ ಎರಡನ್ನೂ ಬೆರೆಸುವುದು ನೀಚ ಮನಸ್ಥಿತಿ’ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ADVERTISEMENT

‘ಶಿವಕುಮಾರ್ ಬಗ್ಗೆ ನನಗೆ ಯಾವುದೇ ಅನುಕಂಪವಿಲ್ಲ. ನಾವೇನಿದ್ದರೂ ಸಜ್ಜನರಿಗೆ ಮಾತ್ರ ಸಹಾನುಭೂತಿ ತೋರಿಸಬಹುದಷ್ಟೆ. ಆದರೆ ಕೆಪಿಸಿಸಿ ಅಧ್ಯಕ್ಷರ ಹಿನ್ನೆಲೆಯೇನು ಎನ್ನುವುದು ಎಲ್ಲರಿಗೂ ಗೊತ್ತಿದೆ’ ಎಂದು ಅವರು ಹೇಳಿದ್ದಾರೆ.

‘ಶಿವಕುಮಾರ್ ಅವರು ಇನ್ನಾದರೂ ಪ್ರಬುದ್ಧವಾಗಿ ವರ್ತಿಸಬೇಕು. ಇಂತಹ ಒಬ್ಬ ವ್ಯಕ್ತಿಯನ್ನು ಅಧ್ಯಕ್ಷರಾಗಿ ಇಟ್ಟುಕೊಂಡಿರುವುದಕ್ಕೆ ಆ ಪಕ್ಷ ಮುಜುಗರ ಅನುಭವಿಸುತ್ತಿದೆ’ ಎಂದು ಸಚಿವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.