ADVERTISEMENT

ಮುಂಗಾರು ತಡವಾದರೆ 6,319 ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ: ಸಿದ್ದರಾಮಯ್ಯ

ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು: ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಮೇ 2025, 16:02 IST
Last Updated 5 ಮೇ 2025, 16:02 IST
ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಕುರಿತು ಜಿಲ್ಲಾಧಿಕಾರಿಗಳ ಜತೆ ನಡೆಸಿದ ವಿಡಿಯೊ ಸಂವಾದದಲ್ಲಿ ಸಿದ್ದರಾಮಯ್ಯ ಹಾಗೂ ಕೃಷ್ಣಬೈರೇಗೌಡ ಸಮಾಲೋಚನೆಯಲ್ಲಿ ತೊಡಗಿದ್ದರು. ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಎಂ.ಬಿ. ಪಾಟೀಲ, ಪ್ರಿಯಹಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ, ಡಿ. ಸುಧಾಕರ್ ಪಾಲ್ಗೊಂಡಿದ್ದರು.
ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಕುರಿತು ಜಿಲ್ಲಾಧಿಕಾರಿಗಳ ಜತೆ ನಡೆಸಿದ ವಿಡಿಯೊ ಸಂವಾದದಲ್ಲಿ ಸಿದ್ದರಾಮಯ್ಯ ಹಾಗೂ ಕೃಷ್ಣಬೈರೇಗೌಡ ಸಮಾಲೋಚನೆಯಲ್ಲಿ ತೊಡಗಿದ್ದರು. ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಎಂ.ಬಿ. ಪಾಟೀಲ, ಪ್ರಿಯಹಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ, ಡಿ. ಸುಧಾಕರ್ ಪಾಲ್ಗೊಂಡಿದ್ದರು.   

ಬೆಂಗಳೂರು: ಈ ವರ್ಷ ಮುಂಗಾರು ತಡವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಆಗಬಹುದು. ಶುದ್ಧ ಕುಡಿಯುವ ನೀರಿಗೆ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸೋಮವಾರ ವಿಡಿಯೊ ಸಂವಾದ ನಡೆಸಿ ಅವರು ಕೆಲವು ಸೂಚನೆ ನೀಡಿದರು. 

ಈಗ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 123 ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ ಮೂರು ಸಾವಿರ ಖಾಸಗಿ  ಕೊಳವೆಬಾವಿಗಳನ್ನು ಗುರುತಿಸಲಾಗಿದೆ. 480 ಕೊಳವೆಬಾವಿಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಪ್ರಮುಖ ಸೂಚನೆಗಳು:

*ಕುಡಿಯುವ ನೀರಿನ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ. ಪಂಚಾಯತ್‌ ರಾಜ್‌ ಇಲಾಖೆಗೆ ₹60 ಕೋಟಿ ಈಗಾಗಲೇ ಬಿಡುಗಡೆ ಮಾಡಲಾಗಿದೆ.

* ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಕಾರ್ಯಪಡೆಯಿಂದ ಅನುಮೋದನೆ ಪಡೆದುಕೊಂಡು ಜಾರಿಗೊಳಿಸಬೇಕು.

 * ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು.

* ಅಗತ್ಯವಿದ್ದರಷ್ಟೇ ಕೊಳವೆ ಬಾವಿ ಕೊರೆಸಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಕೊಳವೆ ಬಾವಿ ಕೊರೆಸಿ ಅನಗತ್ಯ ವೆಚ್ಚ ಮಾಡಬಾರದು.

*ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಮುಂಗಾರು ಪೂರ್ವದಲ್ಲಿ ವಾಡಿಕೆಗಿಂತ ಶೇ 55 ರಷ್ಟು ಹೆಚ್ಚು ಮಳೆಯಾಗಿದೆ. ವಾಡಿಕೆಗಿಂತ ಯಾವುದೇ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿಲ್ಲ

* 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲಾ ಜಲಾಶಯಗಳಲ್ಲಿ ಶೇ 50 ರಿಂದ ಶೇ 60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.