ADVERTISEMENT

ಇ–ಸ್ವತ್ತು: ದತ್ತಾಂಶ ಸಂಗ್ರಹ ಸಾಮರ್ಥ್ಯ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2022, 22:00 IST
Last Updated 23 ಡಿಸೆಂಬರ್ 2022, 22:00 IST
   

ಬೆಳಗಾವಿ: ಇ– ಸ್ವತ್ತು ವಹಿವಾಟು ಹೆಚ್ಚಾಗುವುದರಿಂದ ದತ್ತಾಂಶ ಸಂಗ್ರಹ ಸಾಮರ್ಥ್ಯವನ್ನೂ ಹೆಚ್ಚಿಸಲು ₹65 ಕೋಟಿ ವೆಚ್ಚದಲ್ಲಿ ಪ್ರಸ್ತಾವನೆ ಸಿದ್ದಪಡಿಸಿ ಹಣಕಾಸು ಇಲಾಖೆಗೆ ಸಲ್ಲಿಸಲಾಗಿದೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್‌ ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಯು.ಟಿ.ಖಾದರ್ ಅವರ ಪ್ರಶ್ನೆಗೆ ಉತ್ತರಿಸಿ, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ
ಇ- ಆಸ್ತಿ ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯಿಂದ 2022ರ ನವೆಂಬರ್ 5ರಿಂದ ನ.20ರವರೆಗೆ ಸಮಸ್ಯೆ
ಯಾಗಿತ್ತು. ಬಳಿಕ ಸಮಸ್ಯೆ ಸರಿಪಡಿಸಲಾಗಿದೆ. ಇದೀಗ ದತ್ತಾಂಶ ಸಂಗ್ರಹ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗಿದೆ’ ಎಂದರು.

ಈ ಸಮಸ್ಯೆಯ ಪರಿಹಾರಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. 129 ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಸಮಸ್ಯೆಗೂ ಪರಿಹಾರ ಸಿಗಲಿದೆ. ಇನ್ನು 20–25 ದಿನಗಳೊಳಗೆ ಈ ಸಂಬಂಧ ಆದೇಶ ಹೊರಬೀಳಲಿದೆ ಎಂದು ಸಚಿವ ಎಂ.ಟಿ.ಬಿ.ನಾಗರಾಜ್‌ ತಿಳಿಸಿದರು.

ADVERTISEMENT

ಯು.ಟಿ.ಖಾದರ್‌ ಸಮಸ್ಯೆಯನ್ನು ಪ್ರಸ್ತಾಪಿಸಿ, ರಾಜ್ಯದ ಬಹುತೇಕ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿವೇಶನ, ಕಟ್ಟಡಗಳ ಆಸ್ತಿ ಹಕ್ಕಿಗೆ ಸಂಬಂಧಿಸಿದಂತೆ ಇ–ಖಾತಾ ಸರ್ವರ್ ಸ್ತಬ್ಧಗೊಂಡು ಸಮಸ್ಯೆಯಾಗಿದೆ ಎಂದರು.

ಇದಕ್ಕೆ ಧ್ವನಿಗೂಡಿಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಸಚಿವರು ಅಧಿಕಾರಿಗಳ ಬೆನ್ನು ಬೀಳದ ಹೊರತು ಯಾವುದೇ ಕೆಲಸಗಳು ಆಗುವುದಿಲ್ಲ, ಆದೇಶವೂ ಹೊರ ಬೀಳುವುದಿಲ್ಲ. ನೀವು ಹೆಚ್ಚು ಪ್ರಯತ್ನ ಹಾಕಬೇಕು’ ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಹಾಗೂ ಎಂ.ಟಿ.ಬಿ ನಾಗರಾಜ್‌ ಮಾತನಾಡಿ ಇಬ್ಬರೂ ಸೇರಿ ಈ ಸಮಸ್ಯೆ ಪರಿಹಾರಕ್ಕೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.