ADVERTISEMENT

ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಖಾಸಗೀಕರಣ: ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮಾರ್ಚ್ 2023, 9:52 IST
Last Updated 31 ಮಾರ್ಚ್ 2023, 9:52 IST
ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು
ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು   

ಬೆಂಗಳೂರು: ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿಗೆ (ಯುವಿಸಿಇ) ಖಾಸಗೀಕರಣ ಮಾಡಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರ ಕ್ರಮವನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ.

ಯುವಿಸಿಇ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಈಗ ವಿಶ್ವೇಶ್ವರಯ್ಯ ಕಾಲೇಜು ವಿಶ್ವವಿದ್ಯಾಲಯವನ್ನು ಸ್ವಾಯತ್ತ ಸಂಸ್ಥೆಯಾಗಿ ಮಾಡುವ ಮೂಲಕ ರಾಜ್ಯದಲ್ಲಿ ಉಳಿದಿರುವ ಕೆಲವೇ ಸರ್ಕಾರಿ ಕಾಲೇಜುಗಳನ್ನೂ ಸಹ ಖಾಸಗೀಕರಣ ಮಾಡಿ ಬಡವರ ಮಕ್ಕಳಿಗೆ ಎಂಜಿನಿಯರಿಂಗ್ ಓದು ಲಭ್ಯವಿಲ್ಲದಂತೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಅಶ್ವತ್ಥನಾರಾಯಣ ಹೊರಟಿದ್ದಾರೆ. ಇದು ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಯಾಗಿದೆ’ ಎಂದು ವಾಗ್ದಾಳಿ ನಡೆಸಿದೆ.

‘ಕನ್ನಡಿಗರ ಹೆಮ್ಮೆಯ ವಿಶ್ವೇಶ್ವರಯ್ಯ ಕಾಲೇಜು ವಿಶ್ವವಿದ್ಯಾಲಯವನ್ನು ಖಾಸಗೀಕರಣ ಮಾಡಲು ಹೊರಟಿರುವ ಬಿಜೆಪಿ ಸರ್ಕಾರದ ಕ್ರಮ ಖಂಡನೀಯ. ಸರ್ ಎಂ ವಿಶ್ವೇಶ್ವರಯ್ಯನವರು ಕಟ್ಟಿದ ರಾಜ್ಯದ ಮೊದಲ ಎಂಜಿನಿಯರಿಂಗ್ ಕಾಲೇಜು ಇದಾಗಿದ್ದು ರಾಜ್ಯದ ಎಲ್ಲಾ ವರ್ಗದ ಮಕ್ಕಳಿಗೂ ಎಂಜಿನಿಯರಿಂಗ್ ಓದಲು ಇದು ಆಸರೆಯಾಗಿತ್ತು’ ಎಂದು ಕಾಂಗ್ರೆಸ್ ತಿಳಿಸಿದೆ.

ADVERTISEMENT

ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಆಶಯ ಹೊಂದಿದ್ದ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿಗೆ ಈಗ ಆರ್ಥಿಕ ಸಂಕಷ್ಟ ಎದುರಾಗಿದೆ.

1964ರಿಂದ ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿದ್ದ ಈ ಕಾಲೇಜಿಗೆ 2022ರ ಮಾರ್ಚ್‌ 25ರಿಂದ ಸ್ವಾಯತ್ತತೆ ನೀಡಿದ್ದರೂ, ರಾಜ್ಯ ಸರ್ಕಾರ ಅನುದಾನ ನೀಡಲು ಹಿಂದೇಟು ಹಾಕುತ್ತಿದೆ. ಇದರಿಂದ, ಕಾಲೇಜು ಅತಂತ್ರ ಸ್ಥಿತಿಗೆ ಸಿಲುಕಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ಬಡವರ್ಗದ ವಿದ್ಯಾರ್ಥಿಗಳೇ ಪ್ರವೇಶ ಪಡೆಯುವ ಈ ಕಾಲೇಜಿಗೆ ಅನುದಾನ ಒದಗಿಸದೆ ಸ್ವಯಂ ಹಣಕಾಸು ನಿರ್ವಹಣೆಯ ಸಂಸ್ಥೆಯನ್ನಾಗಿ ಮಾಡುವ ಯೋಜನೆ ಇದಾಗಿದೆ ಎಂದು ದೂರಲಾಗಿದೆ. ಸದ್ಯದ ಗೊಂದಲಗಳಿಂದಾಗಿ ಮಾರ್ಚ್‌ ತಿಂಗಳ ವೇತನವೂ ಪ್ರಾಧ್ಯಾಪಕರಿಗೆ ಮತ್ತು ಬೋಧಕೇತರ ಸಿಬ್ಬಂದಿಗೆ ದೊರೆಯುವುದು ಕಷ್ಟಸಾಧ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.