ಬೆಂಗಳೂರು: ಮಾಹಿತಿ ಹಕ್ಕು ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಬಿಬಿಎಂಪಿ ಮಾಜಿ ಸದಸ್ಯೆ ಸಿ.ಜಿ. ಗೌರಮ್ಮ ಕುಟುಂಬದ ₹ 3.35 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಗೌರಮ್ಮ ಮತ್ತು ಅವರ ಪತಿ ಸಿ. ಗೋವಿಂದರಾಜು ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದಡಿ ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, 2012ರ ನವೆಂಬರ್ 12ರಂದು ದಾಳಿ ಮಾಡಿ ಶೋಧ ನಡೆಸಿದ್ದರು. ಆರೋಪಿಗಳು ₹ 3.46 ಕೋಟಿ ಮೌಲ್ಯದ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ತನಿಖಾ ತಂಡ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು.
ಲೋಕಾಯುಕ್ತ ಪೊಲೀಸರು ಆರೋಪಪಟ್ಟಿಯಲ್ಲಿ ನೀಡಿದ್ದ ವಿವರಗಳನ್ನು ಆಧರಿಸಿ ಗೌರಮ್ಮ ದಂಪತಿ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ ಪ್ರತ್ಯೇಕ ಪ್ರಕರಣ ದಾಖಲಿಸಿತ್ತು. ಗೌರಮ್ಮ ಪಾಲಿಕೆ ಸದಸ್ಯೆಯಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮ ಆಸ್ತಿ ಸಂಪಾದಿಸಿರುವುದು ದೃಢಪಟ್ಟಿದೆ ಎಂದು ಇ.ಡಿ ಹೇಳಿದೆ.
ಗೌರಮ್ಮ ಕುಟುಂಬಕ್ಕೆ ಸೇರಿದ ಮನೆ, ನಿವೇಶನ, ಕೈಗಾರಿಕಾ ನಿವೇಶನ ಮತ್ತು ಕೃಷಿ ಜಮೀನುಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತನಿಖಾ ಸಂಸ್ಥೆ ಮಾಹಿತಿ ನೀಡಿದೆ.
2012ರ ನವೆಂಬರ್ 20ರಂದು ಲಿಂಗರಾಜು ಅವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಗೌರಮ್ಮ, ಗೋವಿಂದರಾಜು ಸೇರಿದಂತೆ ಹಲವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ 2020ರಲ್ಲಿ ಆದೇಶ ಹೊರಡಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.