ADVERTISEMENT

ಶಾಲೆ ಬಂದ್ ಬೇಡ; ಮಾತುಕತೆಗೆ ಬನ್ನಿ: ಸಚಿವ ಸುರೇಶ್‌‌ಕುಮಾರ್

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 19:46 IST
Last Updated 22 ಡಿಸೆಂಬರ್ 2019, 19:46 IST
   

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆಆಗ್ರಹಿಸಿ ಶಾಲಾ, ಕಾಲೇಜುಗಳನ್ನು ಬಂದ್‌ ಮಾಡಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮಾಡುವ ನಿರ್ಧಾರವನ್ನು ಕೈಬಿಟ್ಟು ಮಾತುಕತೆಗೆ ಬರುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ವಿವಿಧ ಮಠಾಧೀಶರನೇತೃತ್ವದಲ್ಲಿ ನಡೆದ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಸಭೆಯಲ್ಲಿ ಜನವರಿ 17ರಿಂದ ಶಾಲಾ, ಕಾಲೇಜುಗಳನ್ನು ಬಂದ್ ಮಾಡಿ ಹೋರಾಟ ಕೈಗೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಸಚಿವರು ಈ ಸಲಹೆ ನೀಡಿದ್ದಾರೆ.

ಈ ಸಂಬಂಧ ಬಸವರಾಜ ಹೊರಟ್ಟಿ ಅವರಿಗೆ ಸಚಿವರು ಪತ್ರ ಬರೆದಿದ್ದು, ಅದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಜನವರಿ ಮೊದಲ ವಾರದಲ್ಲಿ ಸಭೆ ನಡೆಸಿ ಚರ್ಚಿಸಲಾಗುವುದು. ಪರೀಕ್ಷೆಗಳು ಸಮೀಪಿಸುತ್ತಿದ್ದು, ಶಾಲೆಗಳನ್ನು ಬಂದ್ ಮಾಡಿದರೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದೆ. ಹೋರಾಟ ಕೈಬಿಟ್ಟು ಮಾತುಕತೆಗೆ ಬರಬೇಕು ಎಂದು ಕರೆ ನೀಡಿದ್ದಾರೆ.

ADVERTISEMENT

‘ಕಾರಣ ಏನೇ ಇದ್ದರೂ ಶಾಲಾ, ಕಾಲೇಜುಗಳನ್ನು ಬಂದ್ ಮಾಡುವ ನಿರ್ಧಾರ ಒಳಿತಲ್ಲ. ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿದ್ದರೂ ತೆಗೆದುಕೊಂಡಿರುವ ನಿರ್ಧಾರ ಸರಿಯಲ್ಲ. ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳ ನಡುವಿನ ವ್ಯತ್ಯಾಸಗಳು ಮಕ್ಕಳ ಮೇಲೆ ವಿಪರೀತ ಪರಿಣಾಮ ಬೀರಬಾರದು. ಈ ಸಮಸ್ಯೆಗಳು ನಮ್ಮ ಸರ್ಕಾರ ಬಂದ ನಂತರ ಉದ್ಭವಿಸಿಲ್ಲ. ಅನೇಕ ವರ್ಷಗಳಿಂದ ಚರ್ಚೆಗಳಾಗುತ್ತಿದ್ದು, ಬೇಡಿಕೆಗಳನ್ನು ಈಡೇರಿಸಲು ಅಪಾರ ಪ್ರಮಾಣದ ಹಣವೂ ಬೇಕಾಗುತ್ತದೆ ಎಂಬುದು ನಿಮಗೂ ಗೊತ್ತಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.