ಬೆಂಗಳೂರು: ‘ಪಠ್ಯಪುಸ್ತಕ ಪರಿಷ್ಕರಣೆಯಲ್ಲಿನ ತಪ್ಪುಗಳ ಕುರಿತು ಶಿಕ್ಷಣ ಸಚಿವರ ಬದಲಿಗೆ ಕಂದಾಯ ಸಚಿವರು ಸಮಜಾಯಿಷಿ ನೀಡಿದ್ದಾರೆ. ಇದರಿಂದ ನಮ್ಮ ಶಿಕ್ಷಣ ಸಚಿವರು ಅಸಮರ್ಥರೆಂಬುದು ಸಾಬೀತಾಗಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಹಿರಿಯ ನಾಯಕರು, ಶಿಕ್ಷಣ ತಜ್ಞರು, ಸಾಹಿತಿಗಳು ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತಲೇ ಇದ್ದಾರೆ. ಅವರೊಂದಿಗೆ ಸಭೆ ನಡೆಸುವ ಸೌಜನ್ಯವನ್ನು ಮುಖ್ಯಮಂತ್ರಿ ತೋರಿಸಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ’ ಎಂದು ಟೀಕಿಸಿದ್ದಾರೆ.
‘ಕಂದಾಯ ಸಚಿವ ಆರ್. ಅಶೋಕ ಅವರು ಸುಳ್ಳು ಮಾಹಿತಿ ನೀಡುವ ಮೂಲಕ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ‘ಟಿಪ್ಪು ಸುಲ್ತಾನ್ ಹೆಸರು ಹೇಳಿದರೆ ಕಾಂಗ್ರೆಸ್ನವರು ಮೈಮೇಲೆ ಬಂದಂತೆ ಆಡುತ್ತಾರೆ’ ಎಂದು ಹೇಳಿದ್ದಾರೆ. 2012–13ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಟಿಪ್ಪುವಿನ ದೇಶಪ್ರೇಮ, ಪರಾಕ್ರಮ ಕುರಿತ 425 ಪುಟಗಳ ಗ್ರಂಥ ಪ್ರಕಟಿಸಲಾಗಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ್, ಸಚಿವರಾಗಿದ್ದ ಗೋವಿಂದ ಕಾರಜೋಳ, ಆರ್. ಅಶೋಕ ಟಿಪ್ಪುವಿನ ವೇಷ ಧರಿಸಿ ಸಂಭ್ರಮಿಸಿದ್ದರು. ಈಗ ವಾಟ್ಸ್ ಆ್ಯಪ್ ವಿಶ್ವವಿದ್ಯಾಲಯದ ಮಾಹಿತಿ ಆಧರಿಸಿ ಸುಳ್ಳು ಹೇಳುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.