ADVERTISEMENT

ಕನ್ನಡದಲ್ಲಿ ವ್ಯವಹರಿಸಲು ಆರೋಗ್ಯ ಇಲಾಖೆಗೆ ಆಯುಕ್ತ ಪಂಕಜ್‌ ಕುಮಾರ್ ‍ಪಾಂಡೆ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 15:57 IST
Last Updated 3 ಜನವರಿ 2021, 15:57 IST
   

ಬೆಂಗಳೂರು: ‘ಕನ್ನಡ ಕಾಯಕ ವರ್ಷಾಚರಣೆ’ಯ ಸಂಬಂಧ ಸಾರ್ವಜನಿಕರಿಗೆ ಮಾಹಿತಿ ಒದಗಿಸುವಿಕೆ, ಜಾಲತಾಣಗಳಲ್ಲಿ ಕಾರ್ಯಕ್ರಮಗಳ ವಿವರ ಸೇರಿದಂತೆ ಎಲ್ಲ ಕಾರ್ಯಚಟುವಟಿಕೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಅನುಷ್ಠಾನ ಮಾಡುವಂತೆ ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್‌ ಕುಮಾರ್ ‍ಪಾಂಡೆ ಸುತ್ತೋಲೆ ಹೊರಡಿಸಿದ್ದಾರೆ.

‘ಜನಸಾಮಾನ್ಯರಿಗೆ ಹತ್ತಿರವಾಗಿರುವ ಆರೋಗ್ಯ ಇಲಾಖೆಯು ಎಲ್ಲೆಡೆ ಆಂಗ್ಲಭಾಷೆ ಬಳಕೆ ಮಾಡುತ್ತಿದೆ’ ಎಂದು ಈ ಹಿಂದೆ ಅಸಮಾಧಾನ ವ್ಯಕ್ತಪಡಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡದಲ್ಲಿ ವ್ಯವಹರಿಸುವಂತೆ ಇಲಾಖೆಗೆ ಪತ್ರ ಬರೆದಿತ್ತು. ‘ಕನ್ನಡ ಕಾಯಕ ವರ್ಷಾಚರಣೆ’ ಕಾರಣ ಈಗ ಮತ್ತೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಹೀಗಾಗಿ ಇಲಾಖೆಯಲ್ಲಿ ಕನ್ನಡ ಅನುಷ್ಠಾನ ಮಾಡಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ.

‘ಇಲಾಖೆಯ ತಂತ್ರಾಂಶದಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ನೀತಿಯ ಕರಡುಗಳನ್ನು ಕನ್ನಡದಲ್ಲಿ ಸಿದ್ಧಪಡಿಸಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಕಳುಹಿಸುವ ಸಂದೇಶಗಳು, ಮಾಹಿತಿಗಳನ್ನು ಕನ್ನಡದಲ್ಲಿ ಒದಗಿಸಲು ಕ್ರಮಕೈಗೊಳ್ಳಬೇಕು. ಕಚೇರಿಯ ನಾಮಫಲಕ, ಪ್ರಕಟಣೆ, ಅದೇಶಗಳು ಕನ್ನಡದಲ್ಲಿ ಇರಬೇಕು. ಇಲಾಖೆಯಿಂದ ಆಯೋಜಿಸುವ ಎಲ್ಲ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಗಳು ಕಡ್ಡಾಯವಾಗಿ ಕನ್ನಡ ನಾಡು–ನುಡಿ, ನೆಲ–ಜಲ, ಸಂಸ್ಕೃತಿಯನ್ನು ಬಿಂಬಿಸಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ADVERTISEMENT

‘ಇಲಾಖೆಯಿಂದ ಅನುದಾನ ಪಡೆಯುವ ಎಲ್ಲ ಸಂಸ್ಥೆಗಳು ತಮ್ಮ ವಾರ್ಷಿಕ ವರದಿಗಳು, ಬಜೆಟ್ ದಾಖಲೆಗಳನ್ನು ಕನ್ನಡದಲ್ಲಿಯೇ ಸಿದ್ಧಪಡಿಸಿ ಸಲ್ಲಿಸಬೇಕು. ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೇಮಕಾತಿಯಲ್ಲಿ ಕಡ್ಡಾಯವಾಗಿ ಕನ್ನಡಿಗರನ್ನೇ ಒದಗಿಸುವಂತೆ ಮಾನವ ಸಂಪನ್ಮೂಲ ಒದಗಿಸುವ ಸಂಸ್ಥೆಗಳಿಗೆ ಷರತ್ತನ್ನು ವಿಧಿಸಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಸಂಸ್ಥೆಗಳು ರೋಗಿಗಳಿಗೆ ನೀಡಿದ ಸೇವೆಯ ವಿವರದ ಮಾಹಿತಿಗಳು ಹಾಗೂ ದಾಖಲಾತಿಗಳು ಕನ್ನಡದಲ್ಲಿವೆಯೇ ಎನ್ನುವುದನ್ನು ಖಾತರಿಪಡಿಸಿಕೊಳ್ಳಬೇಕು’ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.