
ಸುವರ್ಣ ವಿಧಾನಸೌಧ (ಬೆಳಗಾವಿ): ಮೊಟ್ಟೆ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಂಪನಿಯೊಂದರ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, 124 ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ರಮೇಶ್ ಬಾಬು ವಿಷಯ ಪ್ರಸ್ತಾವಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ದಿನೇಶ್, ‘ಮೂರು ದಿನಗಳಲ್ಲಿ ವರದಿ ಕೈಸೇರಲಿದೆ. ಹಿಂದೆಯೂ ಇಂತಹ ಸುದ್ದಿ ಹರಡಿದಾಗ ಹಲವು ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಒಂದು ಮಾದರಿಯಲ್ಲಿ ಮಾತ್ರ ಗುಣಮಟ್ಟ ಕಡಿಮೆ ಇತ್ತು. ಮೊಟ್ಟೆ ಒಂದು ಪೌಷ್ಟಿಕಾಂಶವಾಗಿದ್ದು, ಯಾವುದೇ ಸಮಸ್ಯೆ ಇರುವುದಿಲ್ಲ. ಹಾಗಾಗಿ, ಆತಂಕ ಅನಗತ್ಯ. ಇಂತಹ ವಿಷಯಗಳಲ್ಲಿ ಸರ್ಕಾರ ಎಚ್ಚರಿಕೆ ವಹಿಸಲಿದೆ ಎಂದರು.
‘ಕಂಪನಿಯೊಂದರ ವರದಿಯು ಮೊಟ್ಟೆ ಉತ್ಪಾದನಾ ವಲಯದ ಮೇಲೆ ಪರಿಣಾಮ ಬೀರುತ್ತದೆ. ಮೊಟ್ಟೆ ಸೇವಿಸುವ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ದುರುದ್ದೇಶದ ವರದಿ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು’ ಎಂದು ರಮೇಶ್ ಬಾಬು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.