ADVERTISEMENT

ಚುನಾವಣೆ ವಿಳಂಬಕ್ಕೆ ಸರ್ಕಾರವೇ ಕಾರಣ: ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ

‘ಅಧಿಕಾರಿಗಳನ್ನು ಜೈಲಿಗೆ ಕಳಿಸಬೇಕಾದೀತು’

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2025, 15:46 IST
Last Updated 4 ಆಗಸ್ಟ್ 2025, 15:46 IST
ಜಿ ಎಸ್ ಸಂಗ್ರೇಶಿ 
ಜಿ ಎಸ್ ಸಂಗ್ರೇಶಿ    

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ. ನ್ಯಾಯಾಲಯ ಸೂಚನೆ ನೀಡಿದ್ದರೂ ಸರ್ಕಾರ ಮೀಸಲಾತಿ ನಿಗದಿ ಮಾಡುತ್ತಿಲ್ಲ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್‌.ಸಂಗ್ರೇಶಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

187 ಸ್ಥಳೀಯ ಸಂಸ್ಥೆಗಳ ಅವಧಿ ನವೆಂಬರ್‌ನಲ್ಲಿ ಮುಗಿಯಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

ಮೀಸಲಾತಿ ನಿಗದಿ ಮಾಡುವುದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಎರಡು ಬಾರಿ ಹೈಕೋರ್ಟ್‌ ಆದೇಶ ಉಲ್ಲಂಘಿಸಿ ನ್ಯಾಯಾಂಗ ನಿಂದನೆ ಮಾಡಿದೆ. ಇದೇ ಪ್ರವೃತ್ತಿ ಮುಂದುವರಿಸಿದರೆ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಜೈಲಿಗೆ ಕಳುಹಿಸಲು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ. ಮೀಸಲಾತಿ ನಿಗದಿ ಮಾಡುವ ಅಧಿಕಾರ ನಮಗೇ ಕೊಟ್ಟರೆ, ಪ್ರತಿ ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಸುತ್ತೇವೆ. ಚುನಾವಣೆ ನಡೆಸದೆ ಎಷ್ಟೋ ವರ್ಷಗಳು ಕಳೆದಿವೆ. ಚುನಾವಣೆ ನಡೆಸಲು ಮೀಸಲಾತಿ ನಿಗದಿ ಮಾಡುವಂತೆ ಕೋರಿ, ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದೇವೆ. ಆದಷ್ಟು ಬೇಗ ಮೀಸಲಾತಿ ನಿಗದಿ ಮಾಡಬೇಕು. ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ತಯಾರಿಸಬೇಕೋ ಅಥವಾ ವಿಧಾನಸಭಾ ಚುನಾವಣೆಯಲ್ಲಿ ಬಳಸಿದ ಪಟ್ಟಿಯನ್ನೇ ಅನುಸರಿಸಬೇಕೊ ಎಂಬುದನ್ನು ಸ್ಪಷ್ಟಪಡಿಸಬೇಕು. ಇದನ್ನು ಮಾಡದೇ ಇದ್ದರೆ ಸರ್ಕಾರಕ್ಕೆ ಆಸಕ್ತಿ ಇಲ್ಲ ಎಂದು ಭಾವಿಸಬೇಕಾಗುತ್ತದೆ’ ಎಂದು ಸಂಗ್ರೇಶಿ ಹೇಳಿದರು.

‘ಕೇಂದ್ರ ಚುನಾವಣಾ ಆಯೋಗಕ್ಕೆ ಎಷ್ಟು ಅಧಿಕಾರ ಇದೆಯೋ ರಾಜ್ಯ ಚುನಾವಣಾ ಆಯೋಗಕ್ಕೂ ಅಷ್ಟೇ ಅಧಿಕಾರ ಇದೆ. ನಮ್ಮದೂ ಸ್ವತಂತ್ರ ಸಂಸ್ಥೆ. ಸರ್ಕಾರ ಅನುಮತಿ ನೀಡಿದರೆ, ನಾವೇ ಸ್ವತಂತ್ರವಾಗಿ ಮತದಾರರ ಪಟ್ಟಿ ತಯಾರಿಸಲು ಸಿದ್ಧರಿದ್ದೇವೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಆಯೋಗದ ಅಧಿಕಾರ ಮೊಟಕುಗೊಳಿಸಲಾಯಿತು’ ಎಂದು ಅವರು ಹೇಳಿದರು.

‘ಜನವರಿ ಅಥವಾ ಫೆಬ್ರುವರಿ ವೇಳೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಿದೆ. ಚುನಾವಣೆಯನ್ನು ಮತ ಪತ್ರಗಳ ಮೂಲಕ ನಡೆಸಲು ಸಿದ್ಧರಿದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮತಪತ್ರ ಬಳಸಲಾಗುತ್ತಿದೆ. ನಮ್ಮಲ್ಲಿರುವ ವಿದ್ಯುನ್ಮಾನ ಮತ ಯಂತ್ರಗಳು 15– 20 ವರ್ಷಗಳಷ್ಟು ಹಳೆಯದಾಗಿವೆ. ಅವುಗಳನ್ನು ಬದಲಿಸಬೇಕಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.