ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ಬೆಂಗಳೂರು: ಮತ ಕಳವು ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಘೋಷಣೆ ಮತ್ತು ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಕೋರಿದ್ದಾರೆ.
ಲೋಕಸಭಾ ಚುನಾವಣೆ–2024ರ ವೇಳೆ ಬೆಂಗಳೂರಿನ ಮತಕ್ಷೇತ್ರದಲ್ಲಿ ಮತ ಕಳವು ನಡೆದಿರುವುದಕ್ಕೆ ನಿರ್ದಿಷ್ಟ ಪುರಾವೆಗಳಿವೆ ಎಂಬ ರಾಹುಲ್ ಆರೋಪಕ್ಕೆ ನೀಡಿದ ಪ್ರತಿಕ್ರಿಯೆಯ ಪತ್ರವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಅವರು, ರಾಹುಲ್ ಮಾಡಿರುವ ಮತ ಕಳವು ಆರೋಪದ ಹೇಳಿಕೆ ಸುಳ್ಳು ಎಂದು ಕಂಡುಬಂದರೆ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಬೇಕಾಗುತ್ತದೆ ಎಂದಿದ್ದಾರೆ.
ಮತದಾರರ ನೋಂದಣಿ ನಿಯಮ ಗಳ ಅಡಿಯಲ್ಲಿ ಘೋಷಣೆ, ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕುವಂತೆ ಕಾಂಗ್ರೆಸ್ ನಾಯಕರನ್ನು ಕೇಳಲಾಗಿದೆ. ಲೋಪ ಇರುವ ಮತದಾರರ ಹೆಸರನ್ನು ಸರಣಿ ಸಂಖ್ಯೆಗಳೊಂದಿಗೆ ನಿರ್ದಿಷ್ಟಪಡಿಸಲು ಅವರನ್ನು ಕೇಳಲಾಗಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸುಳ್ಳು ಘೋಷಣೆ ಮಾಡುವುದು ಜನತಾ ಪ್ರಾತಿನಿಧ್ಯ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆಯ ಪ್ರಕಾರ ಶಿಕ್ಷಾರ್ಹ ಅಪರಾಧ ಎನ್ನುವುದನ್ನು ರಾಹುಲ್ ಗಾಂಧಿ ಅವರು ಒಪ್ಪಿಕೊಳ್ಳುವ ನಿರೀಕ್ಷೆಯಿದೆ ಎಂದಿದ್ದಾರೆ.
‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಿಯಮಗಳ ಪ್ರಕಾರ ಪಾರದರ್ಶಕವಾಗಿ ನಡೆಯುತ್ತಿದೆ. ಈಗಾಗಲೇ 2024 ನವೆಂಬರ್ನ ಮತದಾರರ ಕರಡು ಪಟ್ಟಿ, 2025ನೇ ಜನವರಿಯಲ್ಲಿನ ಮತದಾರರ ಅಂತಿಮ ಪಟ್ಟಿಯನ್ನು ಕಾಂಗ್ರೆಸ್ ಪಕ್ಷದ ಜತೆಗೆ ಹಂಚಿಕೊಳ್ಳಲಾಗಿದೆ. ಈ ಕುರಿತು ಕಾಂಗ್ರೆಸ್ ಯಾವುದೇ ಮೇಲ್ಮನವಿ ಸಲ್ಲಿಸಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.