ADVERTISEMENT

ಚುನಾವಣಾಧಿಕಾರಿ ನಾಪತ್ತೆ!

ಗ್ರಾ.ಪಂ ಸದಸ್ಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 16:54 IST
Last Updated 18 ಜನವರಿ 2019, 16:54 IST

ವಿಜಯಪುರ: ಬರಟಗಿ ತಾಂಡಾದ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗಿ ಶುಕ್ರವಾರ ಇಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಚುನಾವಣೆ ಆರಂಭಕ್ಕೆ ಕೆಲವೇ ಕ್ಷಣಗಳ ಮುನ್ನ, ಚುನಾವಣಾಧಿಕಾರಿ ನಾಪತ್ತೆಯಾಗಿದ್ದಾರೆ.

ಅಧಿಕಾರಿಯ ನಡೆಯನ್ನು ಖಂಡಿಸಿದ ಅಭ್ಯರ್ಥಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ಚುನಾವಣಾಧಿಕಾರಿಯೂ ಆದ ವಿಜಯಪುರ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್. ರಾಠೋಡ ಅವರನ್ನು ಸಂಪರ್ಕಿಸಲು ‘ಪ್ರಜಾವಾಣಿ‘ ಯತ್ನಿಸಿತು. ಆದರೆ, ಅವರು ಲಭ್ಯರಾಗಲಿಲ್ಲ.

ADVERTISEMENT

‘ಚುನಾವಣಾಧಿಕಾರಿಯು ಯಾವ ಕಾರಣಕ್ಕೆ ಚುನಾವಣೆ ಸ್ಥಗಿತಗೊಳಿಸಿದ್ದಾರೆಎಂಬುದು ಗೊತ್ತಿಲ್ಲ. ಕಾರಣ ಕೇಳಿ ನೋಟಿಸ್‌ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಎಸ್‌.ಬಿ.ಶೆಟ್ಟೆಣ್ಣವರ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.