ADVERTISEMENT

ಹೆಚ್ಚುವರಿ ವಿದ್ಯುತ್ ಮಾರಾಟ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 21:37 IST
Last Updated 2 ಜೂನ್ 2021, 21:37 IST
   

ಬೆಂಗಳೂರು: ‘ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚುವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಹೆಚ್ಚುವರಿ ವಿದ್ಯುತ್‌ನ್ನು ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ರಾಜ್ಯದಲ್ಲಿನ ವಿದ್ಯುತ್ ಪೂರೈಕೆಯ ಸ್ಥಿತಿಗತಿ ಮತ್ತು ಕೈಗಾರಿಕೆಗಳಿಗೆ ವಿದ್ಯುತ್ ಪೂರೈಕೆ ಕುರಿತಂತೆ ಅವರು ಬುಧವಾರ ಸಭೆ ನಡೆಸಿದರು.

‘ರಾಜ್ಯದಲ್ಲಿ ಒಟ್ಟು ವಿದ್ಯುತ್‌ನಲ್ಲಿ ಶೇ 18ರಷ್ಟು ಕೈಗಾರಿಕೆಗಳಿಗೆ ಬಳಕೆಯಾಗುತ್ತಿದೆ. ಕೈಗಾರಿಕೆಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್ ಪೂರೈಕೆ ವೇಳೆ ತಲೆದೋರುವ ತೊಡಕುಗಳನ್ನು ನಿವಾರಿಸಲು ಕೈಗಾರಿಕಾ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು’ ಎಂದೂ ಅಧಿಕಾರಿಗಳಿಗೆ ಸಲಹೆ ನೀಡಿದರು.

ADVERTISEMENT

‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯ 30,562.56 ಮೆಗಾ ವ್ಯಾಟ್‌ನಷ್ಟಿದೆ. ಶೇ 50ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸಲಾಗುತ್ತಿದೆ. ಸದ್ಯ ವಿದ್ಯುತ್ ಕೊರತೆ ಇಲ್ಲ. ಜಲಾಶಯಗಳಲ್ಲಿ ಸಾಕಷ್ಟು ನೀರು ಇರುವುದರಿಂದ ಹಾಗೂ ಈ ಬಾರಿ ಮುಂಗಾರು ಸಾಮಾನ್ಯವಾಗಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಈ ಬಾರಿ ವಿದ್ಯುತ್ ಕೊರತೆ ಉಂಟಾಗದು’ ಎಂದು ಅಧಿಕಾರಿಗಳು
ತಿಳಿಸಿದರು.

‘ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಜಾಲದಲ್ಲಿ ಸೋರಿಕೆ ಪ್ರಮಾಣ ಕೇವಲ ಶೇ 3ರಷ್ಟಿದೆ. ಆ ಮೂಲಕ, ಸೋರಿಕೆಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದಾಗ, ‘ವಿತರಣಾ ಜಾಲದ ಸೋರಿಕೆ ಪ್ರಮಾಣವನ್ನು ಶೇ 5ಕ್ಕಿಂತ ಕಡಿಮೆಗೊಳಿಸಬೇಕು’ ಎಂದು ಮುಖ್ಯಮಂತ್ರಿ
ಸೂಚಿಸಿದರು.

‘ನೀರಾವರಿ ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಸಾಧ್ಯವಾಗುವಂತೆ ಸ್ಟೇಷನ್‌ಗಳು ಹಾಗೂ ಫೀಡರ್‌ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. 2022ರ ಮಧ್ಯಭಾಗದಲ್ಲಿ ಈ ಕೆಲಸ ಪೂರ್ಣಗೊಳ್ಳಲಿದೆ. 26 ಸ್ಟೇಷನ್‌ಗಳು ಹಾಗೂ 182 ಫೀಡರ್‌ಗಳ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ’ ಎಂದೂ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಬೃಹತ್‌ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಕೂಡಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.