ADVERTISEMENT

ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ಮೌಲ್ಯಮಾಪನ: ಸಿಎಂ ಬೊಮ್ಮಾಯಿ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಮೇ 2022, 9:16 IST
Last Updated 8 ಮೇ 2022, 9:16 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯದಲ್ಲಿ ಸುಜಲಾ ಜಲಾನಯನ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳ ಫಲಿತಾಂಶದ ಕುರಿತು ಮೌಲ್ಯಮಾಪನ ನಡೆಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಲಾನಯನ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ ನಡೆದ ವಿಶ್ವ ಬ್ಯಾಂಕ್ ನೆರವಿನ ರಾಷ್ಟ್ರಮಟ್ಟದ ರಿವಾರ್ಡ್ ಯೋಜನೆ ಮತ್ತು ಜಲಾನಯನ ಉತ್ಕೃಷ್ಟತಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

'ಈವರೆಗೆ ಮೂರು ಹಂತದಲ್ಲಿ ಸುಜಲಾ ಜಲಾನಯನ ಯೋಜನೆ ಜಾರಿಗೆ ಬಂದಿದೆ. ಆ ಕಾಮಗಾರಿಗಳಿಂದ ಆಗಿರುವ ಅನುಕೂಲ ಮತ್ತು ಯೋಜನೆ ಅನುಷ್ಠಾನದಲ್ಲಿನ ತೊಡಕುಗಳ ಕುರಿತು ಮೌಲ್ಯಮಾಪನ ನಡೆಸಬೇಕು. ಹಿಂದಿನ ತಪ್ಪುಗಳು ಹೊಸ ಜಲಾನಯನ ಅಭಿವೃದ್ಧಿ ಯೋಜನೆ ಅನುಷ್ಠಾನದಲ್ಲಿ ಆಗದಂತೆ ಎಚ್ಚರ ವಹಿಸಬೇಕು' ಎಂದರು.

ADVERTISEMENT

ಕೃಷಿ ವಿಶ್ವವಿದ್ಯಾಲಯಗಳು ಬದಲಾಗಬೇಕು. ಅಲ್ಲಿನ ತಜ್ಞರು ಮತ್ತು ಸಂಶೋಧಕರು ತಮ್ಮ ನಿಲುವು ಬದಲಾಯಿಸಿಕೊಳ್ಳಬೇಕು. ವಿಶ್ವವಿದ್ಯಾಲಯಗಳ ಆವರಣದಿಂದ ಹೊರ ಬಂದು, ರೈತರ ಜಮೀನುಗಳಲ್ಲೇ ಸಂಶೋಧನೆ ಕೈಗೊಳ್ಳಬೇಕು. ಸಂಶೋಧನೆಯ ಪೂರ್ಣ ಫಲ ರೈತರನ್ನು ತಲುಪುವಂತೆ ಕೆಲಸ ಮಾಡಬೇಕು ಎಂದರು.

ಹೆಚ್ಚಿನ ಕೃಷಿ ವಿಶ್ವವಿದ್ಯಾಲಯಗಳು ಪ್ರಾಯೋಜಕರನ್ನು ಆಧರಿಸಿದ ಸಂಶೋಧನೆಗಳನ್ನು ಕೈಗೊಳ್ಳುತ್ತಿವೆ. ಈ ಪರಿಪಾಠ ನಿಲ್ಲಬೇಕು. ರೈತ ಕೇಂದ್ರಿತ ಸಂಶೋಧನೆಗಳು ನಡೆಯಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.