ADVERTISEMENT

ಶ್ರೀಕಂಠೇಗೌಡರಂಥ ಅನುಭವಿ ರಾಜಕಾರಣಿ ಬೀದಿಗಿಳಿದು ಜಗಳ ಮಾಡಬಾರದು: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 14:01 IST
Last Updated 26 ಏಪ್ರಿಲ್ 2020, 14:01 IST
   

ಬಳ್ಳಾರಿ: ‘ವಿಧಾನ ಪರಿಷತ್‌ ಸದಸ್ಯ ಶ್ರೀಕಂಠೇಗೌಡ ಹಿರಿಯ, ಅನುಭವಿ ರಾಜಕಾರಣಿ. ಅವರು ಬೀದಿಗಿಳಿದು ಜಗಳ ಮಾಡಬಾರದು. ಮಂಡ್ಯದಲ್ಲಿ ನಡೆದ ಘಟನೆಯನ್ನು ನಾನು ಖಂಡಿಸುತ್ತೇನೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ‘ಶ್ರೀಕಂಠೇಗೌಡರಂತಹ ರಾಜಕಾರಣಿಗಳು ಬೇರೆಯವರಿಗೆ ಮಾದರಿಯಾಗಬೇಕು. ಅದು ಬಿಟ್ಟು ಬೀದಿಗಿಳಿದು ಜಗಳ ಸರಿಯಲ್ಲ. ಪಾದರಾಯನಪುರ ಸೇರಿದಂತೆ ಅನೇಕ ಕಡೆ ಈ ರೀತಿಯ ಘಟನೆಗಳು ನಡೆದಿದ್ದು, ಅವುಗಳು ಮರುಕಳಿಸಬಾರದು’ ಎಂದರು.

‘ಬಳ್ಳಾರಿ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೋವಿಡ್‌–19ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ಲಾಸ್ಮಾ ಥೆರಪಿ ಸೋಮವಾರದಿಂದ (ಏ.27) ಅಧಿಕೃತವಾಗಿ ಆರಂಭವಾಗಲಿದ್ದು, ಮತ್ತಷ್ಟು ಸೋಂಕಿತರು ಬೇಗ ಗುಣಮುಖರಾಗುವರು’ ಎಂದು ಭರವಸೆ ವ್ಯಕ್ತಪಡಿಸಿದರು.

ADVERTISEMENT

‘ಡೆಂಗಿ, ಜ್ವರ, ಹೃದಯ ಸಮಸ್ಯೆ ಇರುವವರಿಗೆ ಪಾಸ್‌ ವ್ಯವಸ್ಥೆ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು’ ಎಂದರು.

‘ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವ ಪತ್ರಕರ್ತರ ರಕ್ಷಣೆ ನಮ್ಮ ಸರ್ಕಾರದ ಹೊಣೆ. ಅವರಿಗೆ ಸರ್ಕಾರದಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ನಂಜನಗೂಡಿನ ಜ್ಯುಬಿಲಿಯೆಂಟ್‌ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಸೋಂಕು ಹೇಗೆ ತಗುಲಿತು ಎನ್ನುವುದು ಇದುವರೆಗೆ ಗೊತ್ತಾಗಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.