ADVERTISEMENT

ರಾಜ್ಯದಲ್ಲಿ ಆಹಾರ ಪದಾರ್ಥಗಳ ರಫ್ತಿಗೆ ಕ್ಲಸ್ಟರ್‌: ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 12:07 IST
Last Updated 19 ಆಗಸ್ಟ್ 2021, 12:07 IST
ಉಡುಪಿಯ ಕಡೇಕಾರಿನಲ್ಲಿ ಗುರುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭತ್ತದ ಗದ್ದೆಯಲ್ಲಿ ಕಳೆ ತೆಗೆದರು.
ಉಡುಪಿಯ ಕಡೇಕಾರಿನಲ್ಲಿ ಗುರುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭತ್ತದ ಗದ್ದೆಯಲ್ಲಿ ಕಳೆ ತೆಗೆದರು.   

ಉಡುಪಿ: ಜನಸಂಖ್ಯೆಗೆ ಹೋಲಿಸಿದರೆ ದೇಶದಲ್ಲಿ ಆಹಾರ ಉತ್ಪಾದನೆಯ ಪ್ರಮಾಣ ಹೆಚ್ಚಾಗಿದ್ದು, ವಿದೇಶಗಳಿಗೆ ರಫ್ತು ಮಾಡಲು ಕ್ಲಸ್ಟರ್‌ಗಳನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಆಹಾರ ಪದಾರ್ಥಗಳನ್ನು ರಫ್ತು ಮಾಡುವ ಕ್ಲಸ್ಟರ್‌ಗಳ ಸಂಖ್ಯೆ ಕಡಿಮೆ ಇದ್ದು, ಆದ್ಯತೆ ಮೇರೆಗೆ ಹೆಚ್ಚು ಕ್ಲಸ್ಟರ್‌ಗಳನ್ನು ಸ್ಥಾಪಿಸಲು ರಾಜ್ಯದ ಕೃಷಿ ಸಚಿವರ ಬಳಿ ಚರ್ಚಿಸಲಾಗಿದೆ. ಮಂಡ್ಯದಲ್ಲಿ ಕಬ್ಬು, ಚಾಮರಾಜನಗರದಲ್ಲಿ ಅರಿಶಿನ ಹಾಗೂ ಇತರ ಜಿಲ್ಲೆಗಳಲ್ಲಿ ಹಣ್ಣು ಹಾಗೂ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಜಾಗತಿಕ ಬೇಡಿಕೆ ಇರುವ ಗುಣಮಟ್ಟದ ಆಹಾರ ಪದಾರ್ಥಗಳನ್ನು ವಿದೇಶಗಳಿಗೆ ರಫ್ತು ಮಾಡಲು ಕ್ಲಸ್ಟರ್‌ಗಳು ನೆರವಾಗಲಿವೆ ಎಂದರು.

2023 ವಿಶ್ವ ಸಿರಿಧಾನ್ಯಗಳ ವರ್ಷ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದ್ದು, ದೇಶದಲ್ಲಿ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಮಣಿಪುರ, ನಾಗಾಲ್ಯಾಂಡ್‌, ಸಿಕ್ಕಿಂ, ಮೇಘಾಲಯ, ತ್ರಿಪುರಗಳಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದ ಆಹಾರ ಪದಾರ್ಥಗಳು ವಿದೇಶಗಳಿಗೆ ರಫ್ತಾಗುತ್ತಿದ್ದು, ರಾಜ್ಯದಲ್ಲೂ ಸಾವಯವ ಕೃಷಿಗೆ ಒತ್ತು ನೀಡುವ ಮೂಲಕ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗುವುದು ಎಂದರು.

ADVERTISEMENT

ಇದಕ್ಕೂ ಮುನ್ನ ಕಡೇಕಾರಿನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಭತ್ತದ ಗದ್ದೆಯಲ್ಲಿ ಕಳೆ ತೆಗೆದರು. ಬಳಿಕ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜತೆ ಉಡುಪಿಯ ಪುರಭವನದಲ್ಲಿ ಭೋಜನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.