ಬೆಂಗಳೂರು: ನಾರಾಯಣಪುರ ಬಲದಂಡೆ ಕಾಮಗಾರಿ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಟಿಸಿ, ಹಣ ಪಾವತಿಸಿರುವ ಆರೋಪದ ಕುರಿತು ವಿಧಾನಮಂಡಲದ ಸದನ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಿಂಗಸುಗೂರಿನ ಮಾಜಿ ಶಾಸಕ ಮಾನಪ್ಪ ವಜ್ಜಲ್ ಸಹೋದರ ಎನ್.ಡಿ. ವಡ್ಡರ್ ಎಂಬ ಗುತ್ತಿಗೆದಾರನಿಗೆ ನಕಲಿ ಬಿಲ್ ಸೃಷ್ಟಿಸಿ ₹ 435 ಕೋಟಿ ಪಾವತಿ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಕಾಂಗ್ರೆಸ್ ಶಾಸಕ ಹೂಲಿಗೇರಿ ಅವರು ಜಲ ಸಂಪನ್ಮೂಲ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಆ ಬಳಿಕ ತನಿಖೆ ನಡೆಸಿದ್ದ ತಾಂತ್ರಿಕ ಸಮಿತಿ, ಅಕ್ರಮ ನಡೆದಿರುವ ಅನುಮಾನ ವ್ಯಕ್ತಪಡಿಸಿದೆ’ ಎಂದರು.
‘ವಿಧಾನಸಭೆಯ ಅಂದಾಜು ಸಮಿತಿಯ ಅಭಯ್ ಪಾಟೀಲ್ ಮತ್ತು ಶಾಸಕ ದೊಡ್ಡನಗೌಡ ಪಾಟೀಲ್ ಮತ್ತಿತರು ಕಾಮಗಾರಿಯ ಸ್ಥಳ ಪರಿಶೀಲನೆಗೆ ತೆರಳಿದ್ದಾಗ ಗುತ್ತಿಗೆದಾರರ ಕಡೆಯವರು ಅಡ್ಡಿಪಡಿಸಿದ್ದಾರೆ. ಈ ಕಾಮಗಾರಿಗಳಲ್ಲಿ ಒಟ್ಟು ₹800 ಕೋಟಿಗೂ ಹೆಚ್ಚು ಮೊತ್ತದ ಅಕ್ರಮ ನಡೆದಿದೆ. ಈ ಕುರಿತು ಸದನ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
‘ಸದನ ಸಮಿತಿ ನೇಮಿಸಿ, ತನಿಖೆ ನಡೆಸುವಾಗ ಅಗತ್ಯ ಭದ್ರತೆ ಒದಗಿಸಬೇಕು. ಅಕ್ರಮ ಕಂಡುಬಂದಲ್ಲಿ ಪೂರ್ಣ ಮೊತ್ತವನ್ನು ವಸೂಲಿ ಮಾಡಬೇಕು. ಅಕ್ರಮ ಎಸಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.