ADVERTISEMENT

ಸುಳ್ಳು ಜಾತಿ ಪ್ರಮಾಣ ಪತ್ರ: ಶಾಸಕ ಕೊತ್ತೂರು ಮಂಜುನಾಥ್‌ ಮೇಲ್ಮನವಿ ವಜಾ

ನಕಲಿ ಜಾತಿ ಪ್ರಮಾಣಪತ್ರ–ಎಫ್‌ಐಆರ್‌ಗೆ ತಡೆ ಕೋರಿದ್ದ ಅರ್ಜಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 14:28 IST
Last Updated 6 ಡಿಸೆಂಬರ್ 2025, 14:28 IST
ಕೊತ್ತೂರು ಮಂಜುನಾಥ್‌
ಕೊತ್ತೂರು ಮಂಜುನಾಥ್‌   

ನವದೆಹಲಿ: ‘ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರಕ್ಕೆ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದಾರೆ’ ಎಂದು ಆರೋಪಿಸಿ ದಾಖಲಾಗಿದ್ದ ಎಫ್‌ಐಆರ್‌ ‍ಪ್ರಶ್ನಿಸಿ ಅಂದಿನ ಶಾಸಕ ಜಿ.ಮಂಜುನಾಥ್‌ (ಕೊತ್ತೂರು ಮಂಜುನಾಥ್‌) ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. 

ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್‌ ಕುಮಾರ್ ಹಾಗೂ ಅಲೋಕ್‌ ಅರಾಧೆ ಅವರ ಪೀಠವು, ‘ಅರ್ಜಿದಾರರು ರಿಟ್ ಮೇಲ್ಮನವಿ ಬಾಕಿ ಇದೆ ಎಂಬ ನೆಪದಲ್ಲಿ ಮಧ್ಯಂತರ ತಡೆಯಾಜ್ಞೆ ಪಡೆಯುವ ಮೂಲಕ ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ‘ ಎಂದು ಅಸಮಾಧಾನ ವ್ಯಕ್ತಪಡಿಸಿತು. 

ಪ್ರಕರಣವೇನು: ಜಿ.ಮಂಜುನಾಥ್ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಚುನಾವಣೆ ಆಯೋಗಕ್ಕೆ ಸಲ್ಲಿಸಲಾದ ಪ್ರಮಾಣ ಪತ್ರದಲ್ಲಿ, ‘ನಾನು ಬುಡಗ ಜಂಗಮ ಜಾತಿಗೆ ಸೇರಿದ್ದೇನೆ‘ ಎಂದು ಸಾರಿಕೊಂಡಿದ್ದರು. ಜೆಡಿಎಸ್‌ನ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಇವರ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಈ ಪ್ರಕರಣ ತಹಶೀಲ್ದಾರ್, ಜಿಲ್ಲಾಧಿಕಾರಿ, ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಟ್ಟಿತ್ತು. ಅಂತಿಮವಾಗಿ ಮಂಜುನಾಥ್ ಆಯ್ಕೆಯನ್ನು ಹೈಕೋರ್ಟ್‌ 2018ರ ಏಪ್ರಿಲ್‌ನಲ್ಲಿ ಅಸಿಂಧುಗೊಳಿಸಿ ಆದೇಶಿಸಿತ್ತು.

ADVERTISEMENT

ಇದನ್ನು ಪ್ರಶ್ನಿಸಿ ಮಂಜುನಾಥ್‌ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್, ಮಂಜುನಾಥ್‌ ಅವರ ಜಾತಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಿತ್ತು. ‘ಒಂದು ವೇಳೆ ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ಬಗ್ಗೆ ನಿಮಗೇನಾದರೂ ಆಕ್ಷೇಪಣೆ ಉದ್ಭವಿಸಿದರೆ ಪುನಃ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಬಹುದು’ ಎಂದು ಮಂಜುನಾಥ್‌ಗೆ ಸ್ವಾತಂತ್ರ್ಯ ನೀಡಿತ್ತು.

ಸುಪ್ರೀಂ ಕೋರ್ಟ್ ನಿರ್ದೇಶನದ ಅನುಸಾರ ಈ ಕುರಿತು ವಿಚಾರಣೆ ನಡೆಸಿದ್ದ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯು 2021ರ ಅಕ್ಟೋಬರ್ 27ರಂದು ತನ್ನ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ, ‘ಜಿ.ಮಂಜುನಾಥ್ ಬುಡಗ ಜಂಗಮ ಜಾತಿಗೆ ಸೇರಿಲ್ಲ. ಬೈರಾಗಿ ಜಾತಿಗೆ ಸೇರಿದವರು. ಸ್ವಾತಂತ್ರ್ಯ ಪೂರ್ವದಲ್ಲಿ ಕೋಲಾರದ ಗೆಜಿಟಿಯರ್‌ನಲ್ಲಿ ಬುಡಗ ಜಂಗಮ ಜಾತಿಯನ್ನು ಮಾಲಾ ನ್ಯಾಸಿ, ಬೈರಾಗಿ ಮುಂತಾದ ಹೆಸರುಗಳಿಂದ ಕರೆಯಲಾಗುತ್ತಿತ್ತು. ಆದರೆ, ಅರ್ಜಿದಾರ ಮಂಜುನಾಥ್ ಅವರ ಸಂಬಂಧಿಕರು ಇತ್ತೀಚಿನ ದಿನಗಳಲ್ಲಿ ಬುಡಗ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡಿಲ್ಲ’ ಎಂದು ತಿಳಿಸಲಾಗಿತ್ತು. 

ಈ ವರದಿಯನ್ನು ಆಕ್ಷೇಪಿಸಿ ಮಂಜುನಾಥ್ ಹೈಕೋರ್ಟ್‌ನಲ್ಲಿ ಪುನಃ ರಿಟ್‌ ಅರ್ಜಿ ಸಲ್ಲಿಸಿದ್ದರು. ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದ ಜಿ.ಮಂಜುನಾಥ್‌ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಆ ಬಳಿಕ ಮುಳಬಾಗಿಲು ಠಾಣೆಯಲ್ಲಿ ಮಂಜುನಾಥ್‌ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿತ್ತು.  ಪ್ರಸ್ತುತ ಕೊತ್ತೂರು ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.