ಬೆಂಗಳೂರು: ವಿಧಾನ ಮಂಡಲದ ಅಧಿವೇಶನ ಆರಂಭವಾಗಿರುವ ಹೊತ್ತಿನಲ್ಲೇ, ರಾಜ್ಯ ಸರ್ಕಾರದ ವಿರುದ್ಧ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಸಿಡಿದು ನಿಂತಿವೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ಸುಗ್ರೀವಾಜ್ಞೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿವೆ.
ಬೃಹತ್ ಸಂಖ್ಯೆಯಲ್ಲಿ ಸೋಮವಾರ ಶಕ್ತಿ ಪ್ರದರ್ಶನ ನಡೆಸಿದ ರೈತರು ಮತ್ತು ಕಾರ್ಮಿಕರು, ಸರ್ಕಾರದ ವಿರುದ್ಧ ಆಕ್ರೋಶ ಮೊಳಗಿಸಿದರು. ಕಾಯ್ದೆಗಳಿಗೆ ತಂದಿರುವ ತಿದ್ದಪಡಿ ವಾಪಸ್ ಪಡೆಯುವ ತನಕ ಹೋರಾಟ ಅಚಲ ಎಂದು ಎಚ್ಚರಿಸಿದರು.
ಮೆಜೆಸ್ಟಿಕ್ನಿಂದ ಮೆರವಣಿಗೆ ನಡೆಸಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ‘ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿವೆ’ ಎಂದು ಕಿಡಿಕಾರಿದರು. ರೈತರು ಆತ್ಮಹತ್ಯೆಗೆ ಈ ಶಾಸನಗಳು ಕಾರಣವಾಗಲಿವೆ ಎಂದು ಅಣುಕು ಪ್ರದರ್ಶನ ನಡೆಸಿದರು. ಐಕ್ಯ ಹೋರಾಟ ಸಮಾವೇಶದಲ್ಲಿ ರೈತ ಹೋರಾಟದ ಕರ್ಮಭೂಮಿ ಕಾಗೋಡಿನ ಮಣ್ಣನ್ನು ಹಂಚಿ ಹೋರಾಟದ ಕಿಚ್ಚು ಹೆಚ್ಚಿಸಿದರು.
ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್, ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಅಶೋಕ್ ದಾವಲೆ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ಕಾರ್ಮಿಕ ಮುಂಖಡ ಮೈಕಲ್ ಬಿ. ಫರ್ನಾಂಡಿಸ್, ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ದಲಿತ ಸಂಘರ್ಷ ಸಮಿತಿಯ ಗುರುಪ್ರಸಾದ್ ಕೆರಗೋಡು, ಲಕ್ಷ್ಮೀನಾರಾಯಣ ನಾಗವಾರ, ಕಾರ್ಮಿಕ ಮುಖಂಡ ಮೀನಾಕ್ಷಿ ಸುಂದರಂ, ಮಾರುತಿ ಮಾನ್ಪಡೆ ಸೇರಿ ನೂರಾರು ರೈತ ಮುಖಂಡರು ಬೀದಿಗಿಳಿದು ಒಗ್ಗಟ್ಟು ಪ್ರದರ್ಶಿಸಿದರು.
ಇನ್ನೊಂದೆಡೆ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘ ಪ್ರತ್ಯೇಕವಾಗಿ ಗಾಂಧಿ ಪ್ರತಿಮೆ ಬಳಿ ಅಹೋರಾತ್ರಿ ಧರಣಿ ಆರಂಭಿಸಿದೆ.
ಸೆ. 25ರಂದು ಬಂದ್ಗೆ ಕರೆ
ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯಿಂದ ಸೆ.25ರಂದು ಪಂಜಾಬ್ ಮತ್ತು ಹರಿಯಾಣದಲ್ಲಿ ಬಂದ್ಗೆ ಕರೆ ನೀಡಲಾಗಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು.
ಕರ್ನಾಟಕದಲ್ಲೂ ಅದೇ ದಿನ ಬಂದ್ ನಡೆಸುವ ಬಗ್ಗೆ ಎಲ್ಲಾ ಸಂಘಟನೆಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.