ADVERTISEMENT

ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ: ರಸ್ತೆ ಮೇಲೆ ಕುಳಿತು ಅನ್ನದಾತರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 8:00 IST
Last Updated 21 ಸೆಪ್ಟೆಂಬರ್ 2020, 8:00 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು; 'ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ' ರಾಜ್ಯದ ಸಾವಿರಾರು ರೈತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನ ಎದುರಿನ ರಸ್ತೆಯಲ್ಲಿ ಕುಳಿತು ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸೋಮವಾರ ಬೆಳಿಗ್ಗೆ ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಧಿವೇಶನ ನಡೆಯುತ್ತಿರುವ ವಿಧಾನಸೌಧದತ್ತ ಹೋಗಿ‌ ಮುತ್ತಿಗೆ ಹಾಕಲು ಮುಂದಾದರು. ಮಾರ್ಗಮಧ್ಯೆಯೇ ಪೊಲೀಸರು ಅವರನ್ನು ತಡೆದರು. ಹೀಗಾಗಿ, ರಸ್ತೆಯಲ್ಲಿ ಕುಳಿತು ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.

ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ, 'ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರು ಹಾಗೂ ಕೃಷಿ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಇದರ ವಿರುದ್ಧ ನಮ್ಮ ಈ ಪ್ರತಿಭಟನೆ' ಎಂದರು.

ADVERTISEMENT

'ರೈತರ ಪರವಾದ ಕಾಯ್ದೆಗಳನ್ನು ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಪರವಾಗಿ ಮಾಡುತ್ತಿವೆ. ಇದರಿಂದ ರೈತರು ಭೂಮಿ ಕಳೆದುಕೊಳ್ಳುವ ಹಾಗೂ ಸಂಕಷ್ಟಕ್ಕೆ ಸಿಲುಕುವ ಕಾಲ ಬರಲಿದೆ. ಇಂಥ ನಡೆಯನ್ನು ಸರ್ಕಾರಗಳು ಕೈಬಿಡಬೇಕು' ಎಂದೂ ಹೇಳಿದರು.
'ಪ್ರತಿ ಬಾರಿಯೂ ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರಗಳು ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ. ಕೇವಲ ಮಾತಿನಲ್ಲೇ ಭರವಸೆ ನೀಡಿ ಮೌನವಾಗುತ್ತಿವೆ. ಈ ಬಾರಿ ಮೌನ ಮುರಿದು ನಮ್ಮ ಬೇಡಿಕೆ ಈಡೇರಿಸುವವರೆಗೂ ಹೋರಾಟ ಹಿಂಪಡೆಯುವುದಿಲ್ಲ' ಎಂದೂ ಅವರು ಎಚ್ಚರಿಸಿದರು.

ರೈತ ಮುಖಂಡ ಕುರುಬೂರು ಶಾಂತಕುಮಾರ್ ಸಹ ಪ್ರತಿಭಟನೆಯಲ್ಲಿ ಇದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳ ಸಾವಿರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸ್ಥಳದಲ್ಲಿ ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.