ADVERTISEMENT

ಬೆಂಗಳೂರಿನಲ್ಲೂ ರೈತ, ಕಾರ್ಮಿಕರ ಪರೇಡ್

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 19:30 IST
Last Updated 15 ಜನವರಿ 2021, 19:30 IST

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಗಣರಾಜ್ಯೋತ್ಸವದ ದಿನವಾದ ಜ.26ರಂದು ಬೆಂಗಳೂರಿನಲ್ಲಿ ದೊಡ್ಡಮಟ್ಟದ ಪರ್ಯಾಯ ಪರೇಡ್ ನಡೆಸಲು ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ ಮತ್ತು ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ ‘ಸಂಯುಕ್ತ ಹೋರಾಟ– ಕರ್ನಾಟಕ’ ಮುಂದಾಗಿದೆ.

ಒಂದು ಸಾವಿರ ಟ್ರ್ಯಾಕ್ಟರ್‌ಗಳು, ಮೂರು ಸಾವಿರ ಕಾರು ಮತ್ತು ದ್ವಿಚಕ್ರ ವಾಹನಗಳು, ಹದಿನೈದು ಸಾವಿರಕ್ಕೂ ಹೆಚ್ಚು ರೈತರು, ದಲಿತರು, ಕಾರ್ಮಿಕರು, ವಿದ್ಯಾರ್ಥಿಗಳು ಪರೇಡ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ‘ಸಂಯುಕ್ತ ಹೋರಾಟ– ಕರ್ನಾಟಕ’ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ವಿವರಿಸಿದ್ದಾರೆ.

‘ರೈತ ವಿರೋಧಿ, ಕಾರ್ಮಿಕ ವಿರೋಧಿ, ದಲಿತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ 50 ದಿನಗಳಿಂದ ಚಾರಿತ್ರಿಕ ಹೋರಾಟ ನಡೆಯುತ್ತಿದೆ. 500 ರೈತ ಸಂಘಟನೆಗಳ ವೇದಿಕೆಯಾಗಿರುವ ‘ಸಂಯುಕ್ತ ಕಿಸಾನ್ ಮೋರ್ಚಾ’ ಕರೆಯ ಮೇರೆಗೆ ರೈತ ಮತ್ತು ಕಾರ್ಮಿಕರ ಪರೇಡ್‌ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದ ತನಕ ಪರೇಡ್ ನಡೆಯಲಿದೆ. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.