ಬೆಂಗಳೂರು: ಭಾರತದ ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವುದು ದೇಶದ್ರೋಹದ ಹೇಳಿಕೆ. ಪದೇಪದೇ ಇಂತಹ ಹೇಳಿಕೆ ನೀಡುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ರಾಜ್ಯ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಎಎಪಿ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಒತ್ತಾಯಿಸಿದ್ದಾರೆ.
ರಾಜ್ಯದ ಜನರು ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ದಬ್ಬಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ ಅವರು ಗಟ್ಟಿಗುಂಡಿಗೆಯ ನಿರ್ಧಾರ ಕೈಗೊಳ್ಳಬೇಕು. ಎಲ್ಲ ವಿಚಾರಕ್ಕೂ ಹೆದರಿಕೊಂಡು ಕುಳಿತುಕೊಳ್ಳುವುದು ತಮ್ಮ ಹುದ್ದೆಗೆ ಶೋಭೆ ತಾರದು. ಬಿಜೆಪಿ ಹೇಳುತ್ತಿರುವಂತೆ ಅನಂತ ಕುಮಾರ್ ಹೇಳಿಕೆ ಅವರ ವೈಯಕ್ತಿಕವಲ್ಲ. ಏಕೆಂದರೆ ಬಿಜೆಪಿ ಮತ್ತು ಆರ್ಎಸ್ಎಸ್ನ ಮೂಲ ಉದ್ದೇಶವೇ ಸಂವಿಧಾನ ಬದಲಿಸುವುದು. ಪ್ರಜಾಪ್ರಭುತ್ವದ ಬದಲು ಸರ್ವಾಧಿಕಾರ ಹೇರುವುದು. ಬಿಜೆಪಿಗೆ ನೈತಿಕತೆ ಇದ್ದರೆ ತಕ್ಷಣ ಅವರನ್ನು ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನರು ಈ ಬಾರಿ ಬಿಜೆಪಿಗೆ ಮತ ಹಾಕಿದರೆ ಶಾಶ್ವತವಾಗಿ ಮತದಾನದ ಹಕ್ಕು ಕಳೆದುಕೊಳ್ಳುವರು. ಮುಂದೆ ಚುನಾವಣೆಯೇ ನಡೆಯುವುದಿಲ್ಲ. ನರೇಂದ್ರ ಮೋದಿ ಸಾಯುವವರೆಗೂ ಆಳ್ವಿಕೆ ಮಾಡುತ್ತಾರೆ. ಜನಾಂಗೀಯ ದ್ವೇಷಕ್ಕೆ ರಕ್ತಪಾತವೇ ಆಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.