
ಸಿದ್ದರಾಮಯ್ಯ
ಬೆಂಗಳೂರು: ಮೈಸೂರಿನಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಈ ಕುರಿತು ತಮ್ಮ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
'ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ' ಎಂದು ಹೇಳಿದ್ದಾರೆ.
'ಸಿನಿಮಾ ಅತ್ಯಂತ ಪ್ರಭಾವಿ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜವನ್ನು ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿದರೆ ಅದರಿಂದ ಬದಲಾವಣೆ ಸಾಧ್ಯ' ಎಂದಿದ್ದಾರೆ.
'ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು' ಎಂದು ಹೇಳಿದ್ದಾರೆ.
'ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ನೇ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಿದೆ' ಎಂದು ಅವರು ತಿಳಿಸಿದ್ದಾರೆ.
'ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಹೇಳಿದ್ದಾರೆ.
'ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.