ಲೈಂಗಿಕ ದೌರ್ಜನ್ಯ –ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಚಿತ್ರರಂಗದಲ್ಲಿ ಮಹಿಳೆಯರ ಹಿತರಕ್ಷಣೆಗಾಗಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪಾಶ್) ರಚನೆ ಕುರಿತು ಡಿ.27ರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಂ.ನರಸಿಂಹಲು ಹೇಳಿದರು.
ಹಿಂದೆ ಚಲನಚಿತ್ರ ನಿರ್ದೇಶಕಿ, ನಿರ್ಮಾಪಕಿ ಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ ಪಾಶ್ ರಚನೆಗೆ ಮುಂದಾಗಿದ್ದ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು (ಕೆಎಫ್ಸಿಸಿ) ಚುನಾವಣೆಯ ಕಾರಣವನ್ನು ನೀಡಿ ಸಮಿತಿ ರಚನೆಯನ್ನು ತಡೆ ಹಿಡಿದಿತ್ತು.
‘ಕರ್ನಾಟಕದಲ್ಲಿ ಮಹಿಳಾ ಆಯೋಗ ಇದೆ. ತೊಂದರೆಗೀಡಾದವರು ಮಹಿಳಾ ಆಯೋಗಕ್ಕೆ ದೂರು ನೀಡಿದರೆ ಅವರೆ ನೇರ ಕ್ರಮಕೈಗೊಳ್ಳಬಹುದು. ಅವರಿಗೆ ನಾವು ಪೂರಕ ಮಾಹಿತಿ ನೀಡುತ್ತೇವೆ. ಈ ವಿಷಯದಲ್ಲಿ ವೈಯಕ್ತಿಕ ನಿರ್ಧಾರ ಕೈಗೊಳ್ಳಲಾಗದು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ’ ಎಂದು ತಿಳಿಸಿದರು.
‘ಸರ್ಕಾರ ಕನ್ನಡ ಚಿತ್ರಗಳಿಗೆ ನೀಡುವ ಸಬ್ಸಿಡಿ ವಿತರಣೆಯಲ್ಲಿ ಅವ್ಯವಹಾರ ನಡೆದಿರುವ ಶಂಕೆ ಇದೆ. ಇದು ಸಾಬೀತಾದರೆ ಅವರ ವಿರುದ್ಧ ಕ್ರಮಜರುಗಿಸಲು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಪರಭಾಷಾ ಚಿತ್ರಗಳಿಂದ ಕನ್ನಡ ಚಿತ್ರಗಳಿಗಾಗುತ್ತಿರುವ ತೊಂದರೆ, ಏಕರೂಪದ ಟಿಕೆಟ್ ದರ ನಿಗದಿ ಸೇರಿ ಹತ್ತಾರು ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಸೂಚಿ ಸಿದ್ಧಪಡಿಸಲಾಗಿದೆ’ ಎಂದು ಎಂ.ನರಸಿಂಹಲು ಹೇಳಿದರು.
ಕಾರ್ಯದರ್ಶಿ ಪ್ರವೀಣ್ ಕುಮಾರ್ ಮಾತನಾಡಿ, ಹಿರಿಯ ನಿರ್ಮಾಪಕ ಸಾ ರಾ ಗೋವಿಂದು ಹಾಗೂ ನೂತನ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.