ADVERTISEMENT

ನಾಗಮಂಗಲ: ಶಾಸಕ ಸುರೇಶ್‌ಗೌಡ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2022, 13:19 IST
Last Updated 6 ಆಗಸ್ಟ್ 2022, 13:19 IST

ನಾಗಮಂಗಲ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಹಾಲ್ತಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಶಾಸಕ ಸುರೇಶ್‌ಗೌಡ ವಿರುದ್ಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಶನಿವಾರ ಎಫ್‌ಐಆರ್‌ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆ ಭೂಮಿ ತೆರವುಗೊಳಲು ಸಿಬ್ಬಂದಿಗಯೊಂದಿಗೆ ಹಾಲ್ತಿ ಗ್ರಾಮದ ಬಳಿಯ ಅರಣ್ಯ ಪ್ರದೇಶಕ್ಕೆ ತೆರಳಿದ್ದ ವೇಳೆ ಬೆಂಬಲಿಗರೊಂದಿಗೆ ಬಂದ ಶಾಸಕ ಸುರೇಶ್‌ಗೌಡ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ವಲಯ ಅರಣ್ಯಾಧಿಕಾರಿ ಸತೀಶ್ ದೂರು ದಾಖಲಿಸಿದ್ದರು.

ಗ್ರಾಮ ವ್ಯಾಪ್ತಿಯ ಸರ್ವೆ ನಂಬರ್‌ 135ರಲ್ಲಿ 374 ಎಕರೆ ಅರಣ್ಯ ಪ್ರದೇಶವನ್ನು ಡೀಮ್ಡ್‌ ಅರಣ್ಯ ಎಂದು ಗುರುತಿಸಲಾಗಿದ್ದು ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಲಾಗಿದೆ. ಈ ಪ್ರದೇಶದಲ್ಲಿ 1985ರಲ್ಲಿ 50 ಹೆಕ್ಟೇರ್‌, 2009ರಲ್ಲಿ 50 ಹೆಕ್ಟೇರ್‌ ಭೂಮಿಯಲ್ಲಿ  ಲಕ್ಷಾಂತರ ರೂಪಾಯಿ ಹಣ ವೆಚ್ಚ ಮಾಡಿ ಅರಣ್ಯ ಇಲಾಖೆ ನೆಡುತೋಪು ಅಭಿವೃದ್ಧಿಗೊಳಿಸಿದೆ.

ADVERTISEMENT

ಒತ್ತುವರಿಯಾಗಿರುವ ಅರಣ್ಯ ಪ್ರದೇಶದವನ್ನು ತೆರವುಗೊಳಿಸಲು ನಾಗಮಂಗಲ ತಹಶೀಲ್ದಾರ್‌ ಮೌಖಿಕವಾಗಿ ಸೂಚನೆ ನೀಡಿದ್ದರು. ಇದರ ಆಧಾರದ ಮೇಲೆ ಒತ್ತವರಿ ತೆರವುಗೊಳಿಸಲು ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಶಾಸಕ ಸುರೇಶ್‌ಗೌಡ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಸಿಬ್ಬಂದಿಯನ್ನು ಜೀಪ್‌ ಸಮೇತ ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.