ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಗುರುವವಾರ ಭೇಟಿಯಾಗಿರುವ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಮತ್ತು ಎಫ್ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಮನವಿ ಸಲ್ಲಿಸಿದೆ.
ಇದನ್ನೂ ಓದಿ:ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲು
ಗೃಹ ಕಚೇರಿ ಕೃಷ್ಣಾದಲ್ಲಿ ನಿಯೋಗವು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಯಿತು. ಈ ವೇಳೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ.
ಇದಕ್ಕೂ ಮೊದಲು ಮುಖ್ಯಮಂತ್ರಿಗೆ ಬರೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಎಫ್ಐಆರ್ ರದ್ದು ಮಾಡುವಂತೆ ಆಗ್ರಹಿಸಿದ್ದರು. ಅಲ್ಲದೆ, ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದರು.
ಕಾಂಗ್ರೆಸ್ನ ಟ್ವೀಟ್ಗೆ ಸಂಬಂಧಿಸಿದಂತೆ ವಕೀಲ, ಬಿಜೆಪಿ ಕಾರ್ಯಕರ್ತ ಕೆ.ವಿ ಪ್ರವೀಣ್ ಕುಮಾರ್ ಸುಳ್ಳು ಮಾಹಿತಿ ನೀಡಿ ಸಾಗರ ಪೊಲೀಸ್ ಠಾಣೆಯಲ್ಲಿ ಸೋನಿಯಾ ಗಾಂಧಿ ಅವರ ವಿರುದ್ಧ ದಾಖಲಿಸಿರುವ ದೂರು ರಾಜಕೀಯ ಪ್ರೇರಿತ. ಪಿಎಂ ಕೇರ್ಸ್ ಹಣವನ್ನು ದೇಶದ ಜನರ ಒಳಿತಿಗಾಗಿ ಬಳಕೆ ಮಾಡುವಂತೆ ಕಾಂಗ್ರೆಸ್ ಮಾಡಿದ್ದ ಟ್ವೀಟ್ ಅನ್ನು ತಪ್ಪಾಗಿ ವ್ಯಾಖ್ಯಾನಿಸಿ ದೂರು ನೀಡಲಾಗಿದೆ. ದೂರನ್ನು ಪರಿಶೀಲಿಸದೇ ಸಾಗರ ಪೊಲೀಸರು ಸೋನಿಯಾ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದು ಕಾನೂನು ಪ್ರಕ್ರಿಯೆಯ ದುರುಪಯೋಗ. ಅಲ್ಲದೆ, ಆರೋಗ್ಯಕರ ಟೀಕೆಯನ್ನು ಹತ್ತಿಕ್ಕುವ ಪ್ರಯತ್ನ,’ ಎಂದು ಡಿಕೆ ಶಿವಕುಮಾರ್ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದರು.
‘ಸೋನಿಯಾ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ಕೂಡಲೇ ರದ್ದುಗೊಳಿಸಬೇಕು. ಎಫ್ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು. ಅಲ್ಲದೆ, ಕಾನೂನು ಪ್ರಕ್ರಿಯೆಯಲ್ಲಿ ದೋಷವೆಸಗಿದ ಪೊಲೀಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಬೇಕು,’ ಎಂದು ಡಿಕೆಶಿ ಆಗ್ರಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.