ADVERTISEMENT

ವಾಹನದ ಮೇಲೆ ರಾಜಕೀಯ ಪಕ್ಷದ ಧ್ವಜ ಅಪರಾಧವಲ್ಲ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 16:26 IST
Last Updated 3 ಡಿಸೆಂಬರ್ 2021, 16:26 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ವಾಹನಗಳ ಮೇಲೆ ರಾಜಕೀಯ ಪಕ್ಷಗಳ ಧ್ವಜ, ಚಿಹ್ನೆ ಹಾಕಿಕೊಂಡ ಕಾರ್ಯಕರ್ತರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 171 (ಚುನಾವಣಾ ಖರ್ಚು ವೆಚ್ಚ ನೀಡುವಲ್ಲಿ ವಿಫಲ) ಅಡಿ ಪ್ರಕರಣ ದಾಖಲಿಸುವಂತಿಲ್ಲ’ ಎಂದು ಹೈಕೋರ್ಟ್‌ ಆದೇಶಿಸಿದೆ.

ಹೈಕೋರ್ಟ್‌ನ ಕಲಬುರಗಿ ಪೀಠದಲ್ಲಿ ಹನುಮಗೌಡ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಅರ್ಜಿದಾರರು ದೂರಿನಲ್ಲಿ ಆರೋಪಿಸಿರುವಂತೆ ರಾಜಕೀಯ ಪಕ್ಷದ ಧ್ವಜ ಮತ್ತು ಚಿಹ್ನೆಗಳನ್ನು ಹೊಂದಿದ್ದ ವಾಹನಗಳಲ್ಲಿ ಬಂದು ಚುನಾವಣೆ ಸಂಬಂಧ ಅಕ್ರಮ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಒದಗಿಸಿಲ್ಲ. ಇದು ಕಾನೂನಿನ ಸ್ಪಷ್ಟ ದುರುಪಯೋಗ’ ಎಂದು ಅಭಿಪ್ರಾಯಪಟ್ಟಿದೆ.

2018ರ ವಿಧಾನಸಭಾ ಚುನಾವಣೆ ವೇಳೆ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಹನುಮಗೌಡ ಸೇರಿದಂತೆ ಮೂವರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ನ್ಯಾಯಪೀಠ ರದ್ದುಗೊಳಿಸಿದೆ.

ADVERTISEMENT

‘ಒಂದು ವೇಳೆ ಕರ್ನಾಟಕ ಮುಕ್ತ ಜಾಗಗಳ ವಿರೂಪಗೊಳಿಸುವ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಬೇಕಾದರೆ ನಿಯಮದ ಪ್ರಕಾರ ಸರ್ಕಾರ ಅಧಿಸೂಚನೆ ಹೊರಡಿಸಿರಬೇಕು. ಆದರೆ ಈ ಪ್ರಕರಣದಲ್ಲಿ ಸರ್ಕಾರ ಬೆಳಗಾವಿ, ಮಂಗಳೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಮಹಾನಗರ ಪಾಲಿಕೆ ಇರುವೆಡೆ ಮಾತ್ರ ಅಧಿಸೂಚನೆ ಹೊರಡಿಸಿದೆ. ಹಾಗಾಗಿ ಇದೇ ಕಾಯ್ದೆಯನ್ನು ಮುದ್ದೇಬಿಹಾಳಕ್ಕೂ ಅನ್ವಯಿಸಲಾಗದು’ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.