ತುಮಕೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಆದ ನಷ್ಟದ ಬಗ್ಗೆ ರಾಜ್ಯ ಸರ್ಕಾರದಿಂದ ನಾವು ಕೇಂದ್ರ ಸರ್ಕಾರಕ್ಕೆ ಮಧ್ಯಂತರ ವರದಿಯನ್ನೇ ಸಲ್ಲಿಸಿಲ್ಲ. ನಷ್ಟದ ಅಂದಾಜು ಮಾಡುವ ಪ್ರಕ್ರಿಯೆ ನಡೆದಿದೆ. ವರದಿ ಸಲ್ಲಿಸಿದ ಬಳಿಕ ಕೇಂದ್ರ ಸರ್ಕಾರವು ಹೆಚ್ಚಿನ ಪರಿಹಾರ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತುರ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದ ಹಣದ ಜತೆಗೆ ನಾಡಿನಲ್ಲಿನ ದಾನಿಗಳು ನೀಡಿದ ಹಣವನ್ನೇ ಬಳಸಿಕೊಳ್ಳಲಾಗುತ್ತಿದೆ. ಅತಿವೃಷ್ಟಿಯಿಂದಾದ ನಷ್ಟದ ಅಂದಾಜು ಅವಸರದಲ್ಲಿ ಮಾಡಲು ಸಾಧ್ಯವಿಲ್ಲ’ ಎಂದರು.
‘ಬೆಳೆ, ಮನೆ, ಕಟ್ಟಡ, ರಸ್ತೆ ಹಾಳಾಗಿವೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಬೆಟ್ಟಗಳೇ ಕುಸಿದಿವೆ. ಅಲ್ಲದೇ, ಇನ್ನೂ ಮಳೆ ಬೀಳುವ ಮುನ್ಸೂಚನೆ ಇದೆ. ಹೀಗಾಗಿ, ತರಾತುರಿಯಲ್ಲಿ ನಷ್ಟದ ಅಂದಾಜು ಮಾಡಿ ಈಗೊಂದು ವರದಿ ಸಲ್ಲಿಸಿ ಮತ್ತೊಮ್ಮೆ ಇನ್ನೊಂದು ವರದಿ ಸಲ್ಲಿಸಲು ಸಾಧ್ಯವಿಲ್ಲ. ಒಟ್ಟಾರೆ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.