ADVERTISEMENT

ಪ್ರವಾಹ: ದಿನದ 24 ಗಂಟೆ ಎಚ್ಚರವಹಿಸಲು ಜಿಲ್ಲಾಡಳಿತಗಳಿಗೆ ಯಡಿಯೂರಪ್ಪ ಸೂಚನೆ

ಜಿಲ್ಲಾಡಳಿತಕ್ಕೆ ಯಡಿಯೂರಪ್ಪ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 18:25 IST
Last Updated 23 ಜುಲೈ 2021, 18:25 IST
ಯಡಿಯೂರಪ್ಪ
ಯಡಿಯೂರಪ್ಪ   

ಬೆಂಗಳೂರು: ಮಳೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಅಧಿಕಾರಿಗಳು ದಿನ 24 ಗಂಟೆ ಎಚ್ಚರಿಕೆಯಿಂದ‌ ಕೆಲಸ‌ ಮಾಡುವುದರ ಜತೆಗೆ ಮುಂದಿನ‌ 48 ಗಂಟೆ ಏನು ಆಗಬಹುದು ಎಂದು ಅಂದಾಜಿಸಿ ಕಾರ್ಯಪ್ರವೃತ್ತರಾಗಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸೂಚನೆ ನೀಡಿದರು.

ಅತಿಯಾದ ಮಳೆ ಹಾಗೂ ಅಣೆಕಟ್ಟೆಗಳಿಂದ ನೀರು ಬಿಡುಗಡೆಯಿಂದಾಗಿ ತೊಂದರೆಗೆ ಒಳಗಾಗಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿದ ಅವರು, ಸದ್ಯದ ಪರಿಸ್ಥಿತಿಯ ಮಾಹಿತಿಗಳನ್ನು ಪಡೆದುಕೊಂಡರು.

ಪ್ರವಾಹ ಪೀಡಿತ ಗ್ರಾಮಗಳ ಜನರನ್ನು ತಕ್ಷಣವೇ ಅಲ್ಲಿಂದ ತೆರವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಬೇಕು. ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳ ಜನರನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಲು ಕ್ರಮಕೈಗೊಳ್ಳಿ ಎಂದು ಆದೇಶಿಸಿದರು.

ADVERTISEMENT

ಪ್ರವಾಹ ಪರಿಸ್ಥಿತಿ ನಿಭಾಯಿಸುವ ಅಗತ್ಯ ಇರುವ ಜಿಲ್ಲೆಗಳಿಗೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ ತಂಡಗಳನ್ನು ತುರ್ತಾಗಿ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ, ಸೇನಾ ಹೆಲಿಕಾಪ್ಟರ್ ಗಳನ್ನು‌ ಸನ್ನದ್ಧವಾಗಿಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು.

ಅಗತ್ಯ ಇರುವ ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು, ಜನರಿಗೆ ನೆರವು ನೀಡುವ ಕೆಲಸವನ್ನು ತಕ್ಷಣ ಆರಂಭಿಸಬೇಕು. ಪರಿಹಾರ ಕಾರ್ಯದಲ್ಲಿ ತೊಡಗಬೇಕಾದ ಅಧಿಕಾರಿಗಳು ರಜೆ ತೆಗೆದುಕೊಳ್ಳದೇ ಕೆಲಸ ಮಾಡಿ ಎಂದೂ ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.