ಬೆಂಗಳೂರು: 'ನಗರ ವ್ಯಾಪ್ತಿಯಲ್ಲಿ ಕೋವಿಡ್-19ರ ನಿರ್ವಹಣೆ ಹಾಗೂ ಕಂಟೈನ್ಮೆಂಟ್ ವಲಯಗಳಲ್ಲಿ ಬಡವರಿಗೆ ಆಹಾರದ ಕಿಟ್ಗಳನ್ನು ತಲುಪಿಸುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಂಪೂರ್ಣ ವಿಫಲವಾಗಿದೆ' ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
'ಈ ಕುರಿತು ಸಮಜಾಯಿಷಿ ನೀಡಲು ಮಂಗಳವಾರ (ಜು.14) ಮಧ್ಯಾಹ್ನ 2.30ಕ್ಕೆ ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಯುಕ್ತರು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಖುದ್ದು ಹಾಜರಾಗಬೇಕು' ಎಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ತಾಕೀತು ಮಾಡಿದೆ.
'ಬಿಬಿಎಂಪಿ ಎಲ್ಲಾ ಹಂತಗಳಲ್ಲಿ ವಿಫಲವಾಗಿದೆ' ಎಂದು ಕಿಡಿ ಕಾರಿರುವ ನ್ಯಾಯಪೀಠ, 'ಕಂಟೈನ್ಮೆಂಟ್ ವಲಯಗಳಲ್ಲಿನ ಬಡ ಹಾಗೂ ನಿರ್ಗತಿಕರನ್ನು ಗುರುತಿಸುವಲ್ಲಿ ಸಂಪೂರ್ಣಣ ವಿಫಲವಾಗಿದೆ' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
'ಪ್ರಮಾಣಿತ ಮಾರ್ಗಸೂಚಿ ಜಾರಿ ಮಾಡುವ ಹಾಗೂ ನಿರ್ಗತಿಕರಿಗೆ ಆಹಾರ ಕಿಟ್ ವಿವರಿಸುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜೂನ್ 25 ಮತ್ತು ಜುಲೈ 9ರಂದು ನೀಡಿರುವ ಆದೇಶಗಳನ್ನೂ ಪಾಲನೆ ಮಾಡಿಲ್ಲ' ಎಂದು ನ್ಯಾಯಪೀಠ ಕಿಡಿ ಕಾರಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.