ADVERTISEMENT

ವಿದ್ಯಾಗಮದ ಎಡವಟ್ಟು ನಿಲ್ಲಿಸದಿದ್ದರೆ ಅಹೋರಾತ್ರಿ ಧರಣಿ: ಕುಮಾರಸ್ವಾಮಿ‌ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 8:15 IST
Last Updated 10 ಅಕ್ಟೋಬರ್ 2020, 8:15 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾಗಮ ಎಡವಟ್ಟು ನಿಲ್ಲಿಸದಿದ್ದರೆ ಅಹೋರಾತ್ರಿ ಥರಣಿ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ‘ಕೊರೊನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ?’ ಎಂದು ಪ್ರಶ್ನಿಸಿದ್ದಾರೆ.

‘ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರ ಕನಿಷ್ಠ ಆಕ್ಸಿಜನ್‌ ಒದಗಿಸಲು ಪರದಾಡುತ್ತಿದೆ. ಜನಪ್ರತಿನಿಧಿ ಇರಲಿ, ಸಾಮಾನ್ಯ ಪ್ರಜೆ ಇರಲಿ, ಜೀವ ರಕ್ಷಣೆ ಮಾಡಬೇಕಾದದ್ದು ಸರ್ಕಾರದ ಮೊದಲ ಆದ್ಯತೆ ಮತ್ತು ಕರ್ತವ್ಯ. ಜೀವ ಉಳಿದರೆ ತಾನೇ ಬದುಕು?’ ಎಂದಿದ್ದಾರೆ.

ADVERTISEMENT

‘ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ’ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳ ಸಿಬ್ಬಂದಿಗೂ ವೇತನವಿಲ್ಲ. ದೂರು ದುಮ್ಮಾನ ಪರಿಹರಿಸುವವರು ಯಾರು? ಲಾಕ್‌ಡೌನ್‌ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.