ADVERTISEMENT

ಕರ್ಣಾಟಕ‌ ಬ್ಯಾಂಕ್ ಮಾಜಿ ಸಿಇಒ ಜಯರಾಮ್ ಭಟ್ ನಿಧನ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2023, 11:54 IST
Last Updated 9 ಆಗಸ್ಟ್ 2023, 11:54 IST
ಪಿ.ಜಯರಾಮ ಭಟ್
ಪಿ.ಜಯರಾಮ ಭಟ್    

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕು ಪೊಳಲಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಮಂಗಳೂರಿನಲ್ಲಿ ಪದವಿವರೆಗಿನ ಶಿಕ್ಷಣ ಪೂರೈಸಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಪ್ರಾರಂಭಿಸಿದ್ದ ಅವರು, 1973ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ಣಾಟಕ ಬ್ಯಾಂಕ್‌ ಸೇರಿದರು. 1976ರಲ್ಲಿ ಶಾಖಾ ವ್ಯವಸ್ಥಾಪಕರಾಗಿ ವಿವಿಧ ಶಾಖೆಗಳಲ್ಲಿ ಕಾರ್ಯ ನಿರ್ವಹಿಸಿ, ನಂತರ ಸಹಾಯಕ ಪ್ರಧಾನ ವ್ಯವಸ್ಥಾಪಕರಾಗಿ, ಉಪ ಪ್ರಧಾನ ವ್ಯವಸ್ಥಾಪಕರಾಗಿ, 2005ರಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡರು.

2009ರಲ್ಲಿ ಅವರಿಗೆ ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹುದ್ದೆ ಒಲಿಯಿತು. ಸತತ ಮೂರು ಅವಧಿಗೆ ಅವರು ಈ ಹುದ್ದೆಯನ್ನು ನಿರ್ವಹಿಸಿದ್ದಾರೆ.

ADVERTISEMENT

ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್, ಆನ್‌ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್, ಗಿಫ್ಟ್ ಕಾರ್ಡ್ ಮುಂತಾದ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಮೆಚ್ಚುಗೆ ಗಳಿಸಿದ್ದರು.

ಜಯರಾಮ್ ಭಟ್ ಅವರಿಗೆ ಅತ್ಯುತ್ತಮ ಮ್ಯಾನೇಜರ್ ಅವಾರ್ಡ್, ಅತ್ಯುತ್ತಮ ಸಾಧನಾ ಪ್ರಶಸ್ತಿ ದೊರೆತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.